ಬೆಂಗಳೂರು: ವಿಧಾನಸೌಧಕ್ಕೆ ಮತ್ತೆ ಮರಳುವುದು ಭಗವಂತನ ಇಚ್ಛೆ ಹಾಗೂ ಜನರ ಆಶೀರ್ವಾದದ ಮೇಲೆ ಅವಲಂಬಿತವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.
ಎರಡು ವರ್ಷಗಳ ಬಳಿಕ ಕೈಗಾರಿಕಾ ಸಚಿವರ ಜೊತೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ್ದ ವೇಳೆ, ಮಾಧ್ಯಮ ಪ್ರತಿನಿಧಿಗಳು ಮತ್ತೆ ಯಾವಾಗ ವಿಧಾನಸೌಧಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು, ಭವಿಷ್ಯವನ್ನು ಭಗವಂತನೇ ನಿರ್ಧರಿಸುತ್ತಾನೆ. ಜನರ ಆಶೀರ್ವಾದ ಹಾಗೂ ಭಗವಂತನ ಇಚ್ಛೆಯಂತೆ ನಾವು ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದು ಭಗವಂತನ ನಿರ್ಧಾರ ಎಂದು ಹೇಳಿದ ಅವರು, ಅದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ನಾವು ಮೈತ್ರಿ ಪಕ್ಷಗಳ ಹೊಂದಾಣಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ದೆಹಲಿಯ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದು, ಜನರ ಆಶೀರ್ವಾದದೊಂದಿಗೆ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮರಳಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.



