ಹುಬ್ಬಳ್ಳಿ: ಜನರಿಂದ ತಪ್ಪದೇ ವಿದ್ಯುತ್ ಬಿಲ್ ವಸೂಲಿ ಮಾಡುವ ಹೆಸ್ಕಾಂ, ಸೇವೆ ನೀಡುವಲ್ಲಿ ವಿಫಲವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಂಸ್ಥೆಯ ಆರ್ಥಿಕ ಸಂಕಷ್ಟದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.
2024–25 ಸಾಲಿನಲ್ಲಿ 188 ಕೋಟಿ ರೂ. ಆದಾಯ ಕೊರತೆ ಎದುರಾಗಿದೆ ಎಂದು ಹೆಸ್ಕಾಂ ತಿಳಿಸಿದ್ದು, ಈ ನಷ್ಟವನ್ನು ಸರಿದೂಗಿಸಲು ಅವಕಾಶ ನೀಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆ ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಏಳು ಜಿಲ್ಲೆಗಳಿಂದ ಬಂದ ಗ್ರಾಹಕರು, ರೈತರು ಮತ್ತು ಕೈಗಾರಿಕೋದ್ಯಮಿಗಳು ಹೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಕ್ರಮ ವೆಚ್ಚ, ಹಗರಣಗಳು, ಸರಿಯಾದ ಬಿಲ್ ವಸೂಲಿ ಆಗದಿರುವುದು ಹಾಗೂ ಸೇವಾ ವೈಫಲ್ಯವೇ ನಷ್ಟಕ್ಕೆ ಕಾರಣ ಎಂದು ಆರೋಪಿಸಿದ ಸಾರ್ವಜನಿಕರು, ಯಾವುದೇ ಕಾರಣಕ್ಕೂ ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕಬಾರದು ಎಂದು ಒತ್ತಾಯಿಸಿದರು. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ, ಟ್ರಾನ್ಸ್ಫಾರ್ಮರ್ ದುರಸ್ತಿಯಲ್ಲಿ ವಿಳಂಬ ಸೇರಿದಂತೆ ಹಲವು ದೂರುಗಳು ಸಭೆಯಲ್ಲಿ ಕೇಳಿಬಂದವು. ಈ ವೇಳೆ ಮಾತನಾಡಿದ ಆಯೋಗದ ಅಧ್ಯಕ್ಷ ಪಿ. ರವಿಕುಮಾರ್, ಇದು ವಿದ್ಯುತ್ ದರ ಹೆಚ್ಚಳಕ್ಕೆ ಸಂಬಂಧಿಸಿದ ಸಭೆಯಲ್ಲ ಎಂದು ಸ್ಪಷ್ಟಪಡಿಸಿ, ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.



