ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ಸಂಭವಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ಜೈಲಿನಿಂದಲೇ ವಿಡಿಯೋ ಹೊರಬಂದ ಪ್ರಕರಣದ ಹಿನ್ನೆಲೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್, ವೋಕು ಆರೆಂಜಿ ಸೇರಿದಂತೆ ಕೆಲವರು ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ತಕ್ಷಣವೇ ಕ್ರಮ ಕೈಗೊಂಡು ಕೈದಿಗಳನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯಾರಕ್ಗಳಲ್ಲಿ ಅಡಗಿಸಿಟ್ಟಿದ್ದ 10ಕ್ಕೂ ಹೆಚ್ಚು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗಲಾಟೆ ಮಾಡಿದ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



