ಮಂಗಳೂರು, ಆ.6: ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ರಸ್ತೆ ನಿರ್ಮಾಣ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಸೇರಿದ ಸುಮಾರು 3 ಎಕರೆ, 30 ಕೋಟಿ ರೂಪಾಯಿ ಮೌಲ್ಯದ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಕೈಗೊಂಡಿರುವ ಕ್ರಮಕ್ಕೆ ಭಕ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಅಭಿವೃದ್ಧಿ ಯೋಜನೆಯಡಿ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ವೇಳೆ ವರ್ಷಗಳ ಇತಿಹಾಸ ಹೊಂದಿದ್ದ ‘ನಟರಾಜ ವೇದಿಕೆ’ಯನ್ನು ನೆಲಸಮಗೊಳಿಸಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಮುಜರಾಯಿ ಇಲಾಖೆಯ ನಿಯಮಾವಳಿಯಂತೆ ದೇವಸ್ಥಾನದ ಆಸ್ತಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್ ಪ್ರಕ್ರಿಯೆ ಕಡ್ಡಾಯ. ಆದರೆ, ಯಾವುದೇ ಅಧಿಕೃತ ಟೆಂಡರ್ ಕರೆಯದೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದ ಅಮೂಲ್ಯ ಆಸ್ತಿಯನ್ನು ರಸ್ತೆಗಾಗಿ ಬಳಸುವ ಬದಲು ಬೇರೆ ಮಾರ್ಗವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ವಾಹನ ದಟ್ಟಣೆ ನಿಯಂತ್ರಿಸಲು ಅಗಲವಾದ ರಸ್ತೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಗಮನದಲ್ಲಿಟ್ಟುಕೊಂಡೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಸ್ತೆ ನಿರ್ಮಾಣದ ವಿಚಾರ ಇದೀಗ ಪುತ್ತೂರಿನಲ್ಲಿ ಭಕ್ತರು, ಸ್ಥಳೀಯರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

