ಬೆಂಗಳೂರು: ಮೊನ್ನೆ ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದಿಂದ ಎಚ್ಚೆತ್ತುಕೊಂಡ ಕರ್ನಾಟಕ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿ ಮತ್ತು ಮಹಿಳೆಯರ ರಕ್ಷಣೆಗೆ ಮುಂದಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ಅಗೌರವ ತೋರಿದರೆ, ಕೆಟ್ಟದಾಗಿ ಮಾತನಾಡಿದರೆ ಮತ್ತು ಹಿಂಸಾಚಾರ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು.
ಇದು ಜಾಮೀನುರಹಿತ ಅಪರಾಧ. 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು , ಹಾಗೂ 25,000 ರೂ.ನಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ವಿಶೇಷವಾಗಿ ಮಹಿಳೆಯರ ಮೇಲೆ ಆಗುತ್ತಿರುವ ಕೃತ್ಯದಿಂದಾಗಿ ಹೆಚ್ಚಿನ ಅರಿವು ಮೂಡಿಸಬೇಕಿದೆ.
ಮಹಿಳೆಯರೇ ಎಲ್ಲ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮಹಿಳೆಯರಿಗೆ ಭದ್ರತೆ ನೀಡಬೇಕಿದೆ. ಕರ್ತವ್ಯ ನಿರತ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಭದ್ರತೆ ಹೆಚ್ಚಿಸುವ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಭದ್ರತೆ, ಭರವಸೆ ಮೂಡಿಸುವ ನಿಟ್ಟಿನಲ್ಲಿ IMA, Phana, ಖಾಸಗಿ ವೈದ್ಯಕೀಯ ಅಸೋಸಿಯೇಷನ್, ಆಯುಷ್ ಸೇರಿದಂತೆ 12 ಸಂಘಟನೆಗಳೊಂದಿಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.