ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಮತಕ್ಷೇತ್ರದಲ್ಲಿ 200 ಕೋಟಿ ರೂಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿಗಳ ಉಧ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮ್ಯನವರು ರೋಣ ನಗರಕ್ಕೆ ಡಿ.15ರಂದು ಆಗಮಿಸಲಿದ್ದಾರೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು ಆಗಮಿಸಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಕಾರ್ಯಕರ್ತರು ಶ್ರಮಿಸಬೇಕು. ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ 200 ಕೋಟಿ ರೂ ಅನುದಾನವನ್ನು ತರಲಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ನೆರವೇರಿಸಲಿದ್ದಾರೆ ಎಂದರು.
ಹಿರಿಯ ಮುಖಂಡ ವ್ಹಿ.ಆರ್. ಗುಡಿಸಾಗರ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ 50 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯನ್ನು ಹೊಂದಲಾಗಿದೆ. ಮತಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಂದು ಕುಟುಂಬಗಳು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಆಡಳಿತವನ್ನು ಮೆಚ್ಚಿ ಸ್ವಯಂ ಪ್ರೇರಿತರಾಗಿ ಜನರು ಆಗಮಿಸುತ್ತಾರೆ ಎಂದರು.
ಮುಖಂಡ ಯೂಸುಫ್ ಇಟಗಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಹರಡುತ್ತಿರುವ ಸುಳ್ಳು ಪ್ರಚಾರಗಳಿಗೆ ರಾಜ್ಯದ ಜನರು ಕಿವಿ ಕೊಡುತ್ತಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ ಇತ್ತೀಚೆಗೆ ಜರುಗಿದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದು, ಕಾಂಗ್ರೆಸ್ ಪಕ್ಷದ ಆಡಳಿತ ಜನರ ಮನವನ್ನು ಮುಟ್ಟಿದೆ ಎಂದರು.
ಈ ಸಂದರ್ಭದಲ್ಲಿ ವೀರಣ್ಣ ಶೆಟ್ಟರ, ಸಂಗನಗೌಡ ಪಾಟೀಲ, ಪ್ರಭು ಮೇಟಿ, ಪರಶುರಾಮ ಅಳಗವಾಡಿ, ವಿ.ಬಿ. ಸೋಮನಕಟ್ಟಿಮಠ, ಆನಂದ ಚಂಗಳಿ, ಸಂಗು ನವಲಗುಂದ, ಸೋಮು ನಾಗರಾಜ, ಇಸ್ಮಾಹಿಲ್ ಹೊರಪೇಟಿ, ನಾಜಬೇಗಂ ಯಲಿಗಾರ, ಎಸ್.ಎಚ್. ಸೋಂಪುರ, ಗೀತಾ ಮಾಡಲಗೇರಿ, ದುರ್ಗಪ್ಪ ಹಿರೇಮನಿ ಸೇರಿದಂತೆ ರೋಣ, ಗಜೇಂದ್ರಗಡ, ನರೇಗಲ್ಲ, ಡಂಬಳ ಹೊಬಳಿಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.