ವಿಜಯಸಾಕ್ಷಿ ಸುದ್ದಿ, ರೋಣ: ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಸ್ಥಾನದಲ್ಲಿದೆ ಎಂಬುದನ್ನು ನಾವೆಲ್ಲ ಅರಿಯಬೇಕಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಬುಧವಾರ ರೋಣ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ರೋಣ ಸೇರಿದಂತೆ ಮತಕ್ಷೇತ್ರಕ್ಕೆ ಒಳಪಡುವ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದೆ. ಸಮಾಜದ ಎಲ್ಲ ವರ್ಗದ ಜನರಿಗೂ ಅಧಿಕಾರ ದೊರಕಿದೆ ಎಂದರು.
ಇದಕ್ಕೂ ಮೊದಲು ಪುರಸಭೆಯ ಸಭಾಂಗಣದಲ್ಲಿ ತಹಸೀಲ್ದಾರ ನಾಗರಾಜ ಕೆ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಹಿಂದೆ ಅಧ್ಯಕ್ಷರಾಗಿದ್ದ ಗೀತಾ ಮಾಡಲಗೇರಿ, ಉಪಾಧ್ಯಕ್ಷರಾಗಿದ್ದ ದುರ್ಗಪ್ಪ ಹಿರೇಮನಿ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ ಪ್ರಯುಕ್ತ ಬುಧವಾರ ಎರಡೂ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಪುರಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದರಿಂದ ವರಿಷ್ಠರ ಆದೇಶದಂತೆ ಅಧ್ಯಕ್ಷ ಸ್ಥಾನಕ್ಕೆ ಬಸ್ಸಮ್ಮ ಕೊಪ್ಪದ, ಉಪಾಧ್ಯಕ್ಷ ಸ್ಥಾನಕ್ಕೆ ಹನ್ಮಂತಪ್ಪ ತಳ್ಳಕೇರಿ ನಾಮಪತ್ರಗಳನ್ನು ಸಲ್ಲಿಸಿದರು. ಇವರ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ್ದರಿಂದ ತಹಸೀಲ್ದಾರ ನಾಗರಾಜ ಕೆ ಇವರಿಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ವಿ.ಆರ್. ಗುಡಿಸಾಗರ, ವೀರಣ್ಣ ಶೆಟ್ಟರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ, ಶಶಿಕಲಾ ಪಾಟೀಲ, ವಿ.ಬಿ. ಸೋನಮಕಟ್ಟಿಮಠ, ಶಫೀಕ ಮೂಗನೂರ, ಸಂಗಪ್ಪ ಜಿಡ್ಡಿಬಾಗಿಲ, ಬಸವರಾಜ ಯರಗುಪ್ಪ, ಬಸವರಾಜ ಜಗ್ಗಲ, ಆನಂದ ಚಂಗಳಿ, ಗದಿಗೆಪ್ಪ ಕಿರೇಸೂರ, ನಾಜಬೇಗಂ ಯಲಿಗಾರ, ಗೀತಾ ಕೊಪ್ಪದ, ಲಕ್ಷ್ಮೀ ಗಡಗಿ ಸೇರಿದಂತೆ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಪಕ್ಷಬೇಧ ಮರೆತು ಎಲ್ಲಾ ವಾರ್ಡ್ಗಳ ಹಿತವನ್ನೇ ಬಯಸಿ ನಾಗರಿಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಸ್ವಚ್ಛತೆ, ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಸರ್ವ ಸದಸ್ಯರುಗಳ ವಿಶ್ವಾಸವನ್ನು ಪಡೆದು ತಮ್ಮ ಆಡಳಿತವನ್ನು ಜನರು ಮೆಚ್ಚುವ ರೀತಿಯಲ್ಲಿ ನಡೆಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಕಿವಿಮಾತು ಹೇಳಿದರು.