ಕೇರಳ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಗಾಗಿರುವ ಹಿರಿಯ ನಟ ಹಾಗೂ ‘ಕಾಂತಾರ’ ಸಿನಿಮಾದಲ್ಲಿ ನಟಿಸಿರುವ ಜಯರಾಮ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ಜಾರಿ ಮಾಡಿದೆ. ಮುಂದಿನ ಮಂಗಳವಾರ ಕೊಚ್ಚಿಯಲ್ಲಿರುವ ಇ.ಡಿ ವಲಯ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜತೆ ಜಯರಾಮ್ ಅವರ ಸಂಬಂಧದ ಕುರಿತು ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಇ.ಡಿ ಈ ನೋಟಿಸ್ ಜಾರಿ ಮಾಡಿದೆ. ಈಗಾಗಲೇ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಚಾರಣೆ ನಡೆಸುತ್ತಿರುವ ತನಿಖಾ ಸಂಸ್ಥೆ, ಈ ಹಿನ್ನೆಲೆಯಲ್ಲಿ ಜಯರಾಮ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮುಂದಾಗಿದೆ.
ಈ ಹಿಂದೆ ಎಸ್ಐಟಿ ನಡೆಸಿದ ವಿಚಾರಣೆಯಲ್ಲಿ, ಉನ್ನಿಕೃಷ್ಣನ್ ಪೊಟ್ಟಿ ಜತೆ ಯಾವುದೇ ಹಣಕಾಸಿನ ವ್ಯವಹಾರ ಹೊಂದಿಲ್ಲ ಎಂದು ಜಯರಾಮ್ ಸ್ಪಷ್ಟಪಡಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿ ಜಯರಾಮ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ವಿಚಾರಣೆಯ ವೇಳೆ, ಉನ್ನಿಕೃಷ್ಣನ್ ಪೊಟ್ಟಿ ಅವರೊಂದಿಗೆ ಶಬರಿಮಲೆ ದೇಗುಲದಲ್ಲಿ ಹಾಗೂ ಅವರ ಮನೆಯಲ್ಲಿ ನಡೆದ ಹಲವು ಪೂಜಾಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕುರಿತು ಪ್ರಶ್ನಿಸಲಾಗಿತ್ತು. ಜೊತೆಗೆ, ಕೊಟ್ಟಾಯಂ ಜಿಲ್ಲೆಯ ಎಳಂಪಲ್ಲಿ ದೇವಸ್ಥಾನದಲ್ಲಿ ಬಾಗಿಲಿನ ಚೌಕಟ್ಟು (ಕಟ್ಟಿಲಪ್ಪಲಿ) ಪ್ರತಿಷ್ಠಾಪನೆ ಹಾಗೂ ಬಾಗಿಲಿನ ಫಲಕಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗಿ ಜಯರಾಮ್ ತಿಳಿಸಿದ್ದರು.
ಆದರೆ, ಪೊಟ್ಟಿ ಜತೆ ಯಾವುದೇ ರೀತಿಯ ಹಣಕಾಸು ವ್ಯವಹಾರ ನಡೆಸಿಲ್ಲ ಎಂದು ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಎಸ್ಐಟಿ ತನಿಖಾ ತಂಡ ಜಯರಾಮ್ ಅವರನ್ನು ಪ್ರಕರಣದಲ್ಲಿ ಸಾಕ್ಷಿಯಾಗಿ ಪರಿಗಣಿಸಿತ್ತು.



