ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಮಕ್ಕಳ ಸಾರಿಗೆ ಸುರಕ್ಷತೆಯೇ ಶಿಕ್ಷಣ ಸಂಸ್ಥೆಗಳ ಪ್ರಥಮಾದ್ಯತೆಯಾಗಿರಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸ್ಪಷ್ಟಪಡಿಸಿದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರೊಂದಿಗೆ ನಡೆದ ಮಕ್ಕಳ ಸುರಕ್ಷತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಶಾಲಾ ವಾಹನಗಳು ಸರ್ಕಾರದ ನಿಯಮಾವಳಿಗಳಂತೆ ಸಂಪೂರ್ಣವಾಗಿ ಸುರಕ್ಷಿತವಾಗಿರಬೇಕು. ಪ್ರತಿಯೊಂದು ಶಾಲಾ ಬಸ್ಗಳಲ್ಲಿ ಅಗತ್ಯ ದಾಖಲೆಗಳು, ವಾಹನದ ತಾಂತ್ರಿಕ ಸ್ಥಿತಿ, ನಿಯಮಿತ ಫಿಟ್ನೆಸ್ ಪ್ರಮಾಣಪತ್ರ, ವೇಗ ನಿಯಂತ್ರಕ ಸಾಧನ, ಅಗ್ನಿಶಾಮಕ ಉಪಕರಣಗಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ತುರ್ತು ನಿರ್ಗಮನ ವ್ಯವಸ್ಥೆ ಕಡ್ಡಾಯವಾಗಿರಬೇಕು ಎಂದು ಆದೇಶಿಸಿದರು.
ಶಾಲಾ ವಾಹನ ಚಾಲಕರಿಗೆ ಸೂಕ್ತ ಚಾಲನಾ ಪರವಾನಗಿ, ಅನುಭವ ಹಾಗೂ ಮಕ್ಕಳೊಂದಿಗೆ ಸ್ನೇಹಪರ ವರ್ತನೆ ಅಗತ್ಯವಿದೆ. ಶಾಲಾ ಬಸ್ಗಳಲ್ಲಿ ನಿರೀಕ್ಷಕರ (ಅಟೆಂಡರ್) ನೇಮಕ ಕಡ್ಡಾಯವಾಗಿದ್ದು, ಮಕ್ಕಳು ವಾಹನವನ್ನು ಏರುವ-ಇಳಿಯುವ ಸಂದರ್ಭದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರಲ್ಲದೆ, ಯಾವುದೇ ರೀತಿಯ ಅತಿವೇಗ, ಮದ್ಯಪಾನ ಮಾಡಿ ಚಾಲನೆ ಅಥವಾ ನಿರ್ಲಕ್ಷ್ಯಕ್ಕೆ ಆಸ್ಪದವಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸ್ಪಷ್ಟಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಜಿಪಿಎಸ್ ವ್ಯವಸ್ಥೆ ಹಾಗೂ ಪೋಷಕರಿಗೆ ಮಾಹಿತಿ ನೀಡುವ ತಂತ್ರಜ್ಞಾನ ಬಳಕೆಗೆ ಒತ್ತು ನೀಡಬೇಕು. ಶಾಲಾ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಲೋಪ ಕಂಡುಬ ರದಲ್ಲಿ ಸಂಬಂಧಪಟ್ಟ ಶಾಲಾ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕನಕದಾಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ರವಿ ದಂಡಿನ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿನ ಶಾಲಾ ವಾಹನಗಳ ಸಂಪೂರ್ಣ ಸುರಕ್ಷತೆಗೆ ಪ್ರಥಮಾದ್ಯತೆ ನೀಡಬೇಕಾಗಿದೆ. ಪ್ರತಿ ಮಗುವಿನ ಜೀವವೂ ಅತ್ಯಮೂಲ್ಯ. ನಿರ್ಲಕ್ಷ್ಯದ ವಾಹನ ಚಾಲನೆ ಹಾಗೂ ವರ್ತನೆ ಸಹಿಸಲಾಗದು. ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಮ್ಮ ಸಂಸ್ಥೆಯಲ್ಲಿನ ಮಕ್ಕಳ ಆರೋಗ್ಯ ಹಾಗೂ ಸೂಕ್ತ ಸಾರಿಗೆ ಸುರಕ್ಷತೆಗೆ ಆದ್ಯತೆ ವಹಿಸುವ ಮೂಲಕ ನಾಡಿನ ಮುಂದಿನ ಪ್ರಜೆಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸೋಣ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಅವರುಗಳು ಮಕ್ಕಳ ಸುರಕ್ಷಿತ ಸಾರಿಗೆ ಕುರಿತು ಶಾಲಾ ಸಂಸ್ಥೆಯ ಮುಖ್ಯಸ್ಥರು ವಹಿಸಬೇಕಾದ ಕ್ರಮಗಳ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಸಭೆಯಲ್ಲಿ ಪ್ರೊ. ಕೆ.ಎಚ್. ಬೇಲೂರು ಸೇರಿದಂತೆ ಶಿಕ್ಷಣ ಇಲಾಖೆ, ಸಾರಿಗೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಅಟೋಗಳ ಮೂಲಕ ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಸಂದರ್ಭದಲ್ಲಿ ಅಟೋ ಚಾಲಕರು ನಿಗದಿತ ಸಂಖ್ಯೆಗೆ ಅಧಿಕ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಸುರಕ್ಷತೆಗೆ ಕ್ರಮ ವಹಿಸಿ ನಿಧಾನವಾಗಿ ಮಕ್ಕಳನ್ನು ಶಾಲೆಗಳಿಗೆ ತಲುಪಿಸುವ ಹಾಗೂ ಮನೆಗೆ ಕರೆದೊಯ್ಯುವ ಜವಾಬ್ದಾರಿ ವಾಹನ ಚಾಲಕರದ್ದಾಗಿರುತ್ತದೆ ಎಂದು ಎಸ್ಪಿ ರೋಹನ್ ಜಗದೀಶ್ ತಿಳಿಸಿದರು.



