ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಾಡಿನ ಐತಿಹಾಸಿಕ ಪರಂಪರೆಯಲ್ಲಿ ಸಾಧುಗಳು, ಸಂತರು, ಶರಣರು, ಋಷಿಮುನಿಗಳು, ಮಠಾಧೀಶರು ತಮ್ಮ ತಪಃಶಕ್ತಿ, ಸಂಕಲ್ಪ, ಜ್ಞಾನ, ಅನುಭಾವಗಳಿಂದ ಸಮಾಜಸೇವೆ, ತ್ರಿವಿಧ ದಾಸೋಹದ ಮೂಲಕ ಲೋಕ ಕಲ್ಯಾಣಕ್ಕಾಗಿ ಸಮರ್ಪಿಸಿಕೊಂಡಿದ್ದಾರೆ. ಇದಕ್ಕೆ ಲಕ್ಷ್ಮೇಶ್ವರ ಸಮೀಪದ ಹೂವಿನಶಿಗ್ಲಿ ವಿರಕ್ತಮಠ ಸಾಕ್ಷಿಯಾಗಿದೆ.
ಲಿಂ. ನಿರಂಜನ ಮಹಾಸ್ವಾಮಿಗಳು ಬಸವನಾಡು ಬೀದರ ಜಿಲ್ಲೆ ಔರಾದ್ ತಾಲೂಕಿನ ಸೋನಾಳ ಗ್ರಾಮದಿಂದ 1996ರಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಸ್ವಪ್ನವೊಂದು ಬಿದ್ದು, ಹೂವಿನ ಶಿಗ್ಲಿಯಲ್ಲಿನ ಪಾಳು ಬಿದ್ದಿರುವ ಮಠವನ್ನು ಉದ್ಧರಿಸು ಎಂಬ ವಾಣಿಯನ್ವಯ ಕಲ್ಲು-ಮುಳ್ಳುಗಳಿಂದ ಕೂಡಿದ, ಶಿಥಿಲಾವಸ್ಥೆಯ ಚಿಕ್ಕ ಗುಡಿಯಲ್ಲಿ ನೆಲೆನಿಂತ ಶ್ರೀಗಳು ತಮ್ಮ ಸಂಕಲ್ಪ ಶಕ್ತಿಯಿಂದ ಈ ಸ್ಥಳವನ್ನು ಜೀರ್ಣೋದ್ಧಾರಗೊಳಿಸಿದರು. ಆಯುರ್ವೇದ ಔಷಧಿ ಸಿದ್ಧಪಡಿಸಿ ಮಾರಕ ರೋಗಗಳಿಗೆ ದಿವ್ಯೌಷಧಿ ನೀಡಿ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದರು.
ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಸ್ವಾಮಿಗಳ ನೆಚ್ಚಿನ ಶಿಷ್ಯರಾಗಿದ್ದ ಲಿಂ. ನಿರಂಜನ ಶ್ರೀಗಳು ಅವರಂತೆಯೇ ಗ್ರಾಮೀಣ ಪ್ರದೇಶಗಳ ಬಡ, ಅನಾಥ ಮಕ್ಕಳಿಗೆ ತ್ರಿವಿಧ ದಾಸೋಹ ಸೇವೆಯ ಮೂಲಕ ಗುರುಕುಲ ಶಿಕ್ಷಣ ಆರಂಭಿಸಿ ಬಡ ಮಕ್ಕಳ ಆಶಾಕಿರಣವೇ ಆಗಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿವರ್ಷ ಸಂಕ್ರಾಂತಿಗೆ ನಾಡಿನ ಹರಗುರುಚರ ಮೂರ್ತಿಗಳ ಸಮ್ಮುಖದಲ್ಲಿ ಕ್ಷೇತ್ರದಲ್ಲಿ ಜಾತ್ರಾಮಹೋತ್ಸವದ ನಿಮಿತ್ತ ವಿವಿಧ ಸಾಮಾಜಿಕ, ಧಾರ್ಮಿಕ, ಸಾಂಪ್ರದಾಯಿಕ ಹಬ್ಬಗಳನ್ನು ಆಚರಿಸುತ್ತಿದ್ದರು.
ನಿರಂಜನ ಮಹಾಸ್ವಾಮಿಗಳು 2011ರಲ್ಲಿ ಲಿಂಗೈಕ್ಯರಾದ ಬಳಿಕ ಶ್ರೀಮಠದ ಸಂಪೂರ್ಣ ಜವಾಬ್ದಾರಿ ಹೊತ್ತ ಹಾವೇರಿ ತಾಲೂಕಿನ ಮರೋಳ ಗ್ರಾಮದ ಚನ್ನವೀರ ಶ್ರೀಗಳು ಶ್ರೀಮಠ ಮತ್ತು ಗುರುಕುಲವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಶ್ರೀಗುರು ನಿರಂಜನ ಪೂರ್ವ ಪ್ರಾಥಮಿಕ ಕನ್ನಡ ಶಾಲೆ, ಶ್ರೀ ಗುರುಕುಲ ವಸತಿ ಪ್ರಾಥಮಿಕ ಶಾಲೆ, ಶ್ರೀ ಗುರುಕುಲ ವಸತಿ ಪ್ರೌಢಶಾಲೆ ಆರಂಭಿಸಿ, ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಸರ್ಕಾರದ ಅನುದಾನವಿಲ್ಲದೇ ನಿತ್ಯ ನೂರಾರು ವಿದ್ಯಾರ್ಥಿಗಳಿಗೆ ಅನ್ನದಾಸೋಹದ ಜೊತೆಗೆ ಶಿಕ್ಷಣ ದಾಸೋಹ ಸಾಂಗವಾಗಿ ಸಾಗುವಲ್ಲಿ ಶ್ರೀಗಳ ಆಣತಿಯಂತೆ ನಡೆದು ಸಹಾಯ-ಸಹಕಾರ ನೀಡುತ್ತಾ ಬಂದಿರುವ ಗ್ರಾಮಸ್ಥರ ಮತ್ತು ಭಕ್ತರ ಸೇವಾ ಕಾರ್ಯವೂ ಅಷ್ಟೇ ಪ್ರಶಂಸನೀಯ.
ಪ್ರತಿವರ್ಷದಂತೆ ಈ ವರ್ಷವೂ ಜ.13ರಿಂದ 15ರವರೆಗೆ ನಾಡಿನ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಅನ್ನದಾಸೋಹ, ಜ್ಞಾನ ದಾಸೋಹದ ಜಾತ್ರಾ ಮಹೋತ್ಸವ ಮತ್ತು ಲಿಂ.ಶ್ರೀಗಳ ಪುಣ್ಯಸ್ಮರಣೋತ್ಸವ ಆಚರಿಸಲಾಗುತ್ತದೆ. ಖಡಕ್ ರೊಟ್ಟಿ ಮತ್ತು ಕರಿಂಡಿ ಪ್ರಸಾದವೇ ಈ ಜಾತ್ರೆಯ ವೈಶಿಷ್ಟ್ಯವಾಗಿದೆ. ಜಾತ್ರೆಗೆ ಹೂವಿನ ಶಿಗ್ಲಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಶ್ರೀಮಠಕ್ಕೆ ರೊಟ್ಟಿ ಸೇರಿ ಇತರೆ ಆಹಾರ ಧಾನ್ಯಗಳನ್ನು ಸಮರ್ಪಿಸುತ್ತಾರೆ.
ಜ. 13ರಿಂದ 3 ದಿನಗಳ ಕಾಲ ಹೂವಿನ ಶಿಗ್ಲಿಯ ವಿರಕ್ತಮಠದ 47ನೇ ಜಾತ್ರಾ ಮಹೋತ್ಸವ, ಲಿಂ. ನಿರಂಜನ ಮಹಾಸ್ವಾಮಿಗಳವರ 16ನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ಪುರಾಣ ಪ್ರವಚನ, ಲಿಂಗದೀಕ್ಷೆ, ಸಾಮೂಹಿಕ ವಿವಾಹ, ತುಲಾಭಾರ ಸೇವೆ, ಧರ್ಮಸಭೆ, ಮಹಾತ್ಮರ ಬದುಕು-ಬೆಳಕು ಚಿಂತನಗೋಷ್ಠಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ವ್ಯವಹಾರಿಕ ಯುಗದಲ್ಲಿ ಕಮರ್ಷಿಯಲ್ ಆಗದೇ, ಸೇವೆಯಾಗಿಯೇ ಮುಂದುವರೆದದ್ದು ಶ್ರೀ ನಿರಂಜನ ಸ್ವಾಮೀಜಿ (ಬಾಬಾನಂದರು) ಹಾಗೂ ಈಗಿನ ಮಠಾಧೀಶರಾದ ಶ್ರೀ ಚನ್ನವೀರ ಸ್ವಾಮೀಜಿ ಅವರಿಗೆ ಸಲ್ಲುವ ಶ್ರೇಯಸ್ಸಾಗಿದೆ. ಈ ಗುರುಕುಲದಲ್ಲಿ ಬಡ, ಅನಾಥರು ಸೇರಿ 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದು ಅವರಿಗೆ ಶಿಕ್ಷಣದ ಜತೆಗೆ ಧರ್ಮ, ಸಂಸ್ಕೃತಿ, ಸಂಸ್ಕಾರ ಮತ್ತು ವೇದಾಧ್ಯಯನ ನೀಡಿ ಲಿಂ.ಶ್ರೀಗಳ ಮಾರ್ಗದಲ್ಲಿ ಮಠವನ್ನು ವಿಶಿಷ್ಟ ಜಾಗೃತ ಕೇಂದ್ರವನ್ನಾಗಿಸುವತ್ತ ಸಾಗಿದ್ದಾರೆ.



