ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾಯಕ ಶರಣರಾದ ಶರಣ ಮಾದಾರ ಚೆನ್ನಯ್ಯ, ಶರಣ ಸಮಗಾರ ಹರಳಯ್ಯ ಹಾಗೂ ಶರಣ ಡೋಹರ ಕಕ್ಕಯ್ಯನವರ ಜಯಂತಿ ಕಾರ್ಯಕ್ರಮ ಮಂಗಳವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗೌರವಪೂರ್ವಕವಾಗಿ ಜರುಗಿತು.
ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಚಾಲನೆ ನೀಡಿ ಮಾತನಾಡಿ, ನಿಸ್ವಾರ್ಥ ಕಾಯಕ ಮಾಡುವವರೇ ನಿಜವಾದ ಶರಣರು. ನಾನು-ನಾನು ಎಂಬ ಅಹಂಕಾರದಿಂದ ಹೊರಬಂದಾಗಲೇ ಶರಣತ್ವ ಸಾಧ್ಯ. ಶರಣರು ತೋರಿಸಿದ ಸಾಧನೆಯ ದಾರಿಯಲ್ಲಿ ಸಾಗುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಜಯಂತಿಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಸಹಾಯಕ ಆಯುಕ್ತ ಗಂಗಪ್ಪ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ, ಜಾನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣನವರ, ಎಸ್.ಎನ್. ಬಳ್ಳಾರಿ, ಶರೀಫ್ ಬಿಳಿಯಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶರಣತತ್ವ ಚಿಂತಕ ಅಶೋಕ ಬರಗುಂಡಿ ಉಪನ್ಯಾಸ ನೀಡಿ, ಕಾಯಕವನ್ನು ಕೇವಲ ದುಡಿಮೆಯ ಮಟ್ಟಕ್ಕೆ ಸೀಮಿತಗೊಳಿಸಬಾರದು, ಅದು ಆಧ್ಯಾತ್ಮಿಕ ಸಾಧನೆಯ ದಾರಿಯಾಗಿದೆ. 12ನೇ ಶತಮಾನದಲ್ಲೇ ಶರಣರು ವೃತ್ತಿಗೆ ಗೌರವ ನೀಡುವ ಮೂಲಕ ಶ್ರೇಣೀಕೃತ ವ್ಯವಸ್ಥೆಗೆ ಸವಾಲು ಹಾಕಿದರು. ದುಡಿಯುವವನೇ ದೇವರು ಎಂಬ ತತ್ವವನ್ನು ಅವರು ಜೀವನದ ಮೂಲಕ ಸಾರಿದರು. ಶರಣರು ಜಾತಿ, ಧರ್ಮಗಳ ಗಡಿಗಳನ್ನು ಮೀರಿ ಚೈತನ್ಯವೇ ಮೂಲಸ್ವರೂಪ ಎಂದು ಸಾರಿದ್ದು, ಅವರ ತತ್ವ ಇಂದಿಗೂ ಸಮಾಜಕ್ಕೆ ದಿಕ್ಕು ತೋರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.



