ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಘೋಷಿತ ಹಾಗೂ ಅಘೋಷಿತ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ನಗರಸಭೆಯ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ರಾಜಾರಾಮ ಎಸ್. ಪವಾರ ಹೇಳಿದರು.
ನಗರಸಭೆಯಲ್ಲಿ ಸ್ಲಂ ಪ್ರದೇಶಗಳ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ಸ್ಲಂ ಸಮಿತಿ ಮುಖಂಡರೊಂದಿಗೆ ನಡೆದ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ನಗರದ ಸ್ಲಂ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಯುಜಿಡಿ, ಶೌಚಾಲಯ ಸೇರಿದಂತೆ ಹಲವು ಮೂಲಸೌಕರ್ಯಗಳ ಕೊರತೆಯಿದೆ. ಸ್ಲಂ ಸಮಿತಿ ಸಲ್ಲಿಸಿರುವ ಹಕ್ಕೊತ್ತಾಯಗಳನ್ನು ಹಂತ ಹಂತವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ವಸತಿರಹಿತರ ಬೇಡಿಕೆ ಕುರಿತು ಈಗಾಗಲೇ ನಗರಸಭೆಯಿಂದ 348 ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ. ಶೀಘ್ರ ಮನೆಗಳ ವಿತರಣೆಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಲಾಗುವುದು. ಸ್ಲಂ ಪ್ರದೇಶಗಳಲ್ಲಿ ಬಯಲು ಶೌಚಕ್ಕೆ ಕಡಿವಾಣ ಹಾಕಲು ಸ್ವಚ್ಛ ಭಾರತ ಯೋಜನೆಯಡಿ ಸಮೀಕ್ಷೆ ನಡೆಸಿ ಮನೆಗೊಂದು ಪ್ರತ್ಯೇಕ ಶೌಚಾಲಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ಪಡೆದು ನೋಂದಣಿ ಮಾಡಿಕೊಂಡಿರುವ ಕುಟುಂಬಗಳಿಗೆ ಫಾರ್ಮ್ ನಂ.3 ನೀಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ನಗರಸಭೆಗೆ ಸ್ಲಂ ಸೆಸ್ ಪಾವತಿಯಾಗುತ್ತಿದ್ದರೂ, ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಸಮರ್ಪಕ ಅನುದಾನ ಬಳಕೆಯಾಗುತ್ತಿಲ್ಲ. ವಸತಿರಹಿತರಿಗಾಗಿ ಕಳೆದ 14 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ನಗರಸಭೆ ನಡೆಸಿದ ಸಮೀಕ್ಷೆಯಲ್ಲಿ ಗುರುತಿಸಿರುವ 348 ವಸತಿರಹಿತ ಕುಟುಂಬಗಳಿಗೆ ಕೂಡಲೇ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ಪ್ರತಿ ವರ್ಷ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮನವಿ ಮಾಡಲಾಗುತ್ತಿದೆ. ಈ ಬಾರಿ ಬೇಡಿಕೆಗೆ ಆದ್ಯತೆ ನೀಡಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಲಕ್ಷ್ಮಣ ಎಂ. ಜೋಗದಂಡಕರ, ಪರಿಸರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆನಂದ ಬದಿ, ಕಂದಾಯ ಹಾಗೂ ಆಶ್ರಯ ಸಮಿತಿ ವಿಭಾಗದ ಸಿಬ್ಬಂದಿ, ಲೆಕ್ಕಾಧೀಕ್ಷಕರ ವಿಭಾಗದ ಅಧಿಕಾರಿಗಳು, ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಪುಷ್ಪಾ ಬಿಜಾಪೂರ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಹುಸೇನ ಮುಲ್ಲಾನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಸ್ಲಂ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ನಗರಸಭೆ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು. 348 ವಸತಿರಹಿತ ಕುಟುಂಬಗಳಿಗೆ ಮನೆ ಒದಗಿಸುವ ಬಗ್ಗೆಯೂ ಆದ್ಯತೆಯಿಂದ ಕ್ರಮ ವಹಿಸಲಾಗುವುದು.”
— ರಾಜಾರಾಮ ಎಸ್. ಪವಾರ, ಪೌರಾಯುಕ್ತ, ಗದಗ-ಬೆಟಗೇರಿ ನಗರಸಭೆ



