ಗದಗ: ಬಳ್ಳಾರಿಯಲ್ಲಿ ನಡೆದ ಗುಂಡಿನ ಪ್ರಕರಣವನ್ನು ಕ್ರಿಮಿನಲ್ ಚಟುವಟಿಕೆ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕೆಲಸವೂ ಕಾನೂನಿನ ಚೌಕಟ್ಟಿನೊಳಗೆ ನಡೆಯಬೇಕು. ಆದರೆ ಬಳ್ಳಾರಿಯಲ್ಲಿ ನಡೆದ ಘಟನೆ ಇದಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು. ಈ ಗುಂಡು ಯಾರಿಂದ ಬಂದಿದೆ ಎಂಬುದು ಪೊಲೀಸರಿಗೆ ಗೊತ್ತಾಗಿದೆ ಎಂದು ಹೇಳಿದ ಅವರು, ಗುಂಡು ಹಾರಿಸಿದ ವ್ಯಕ್ತಿಯನ್ನು ಪ್ರೇರೇಪಿಸಿದವರನ್ನು ಕೂಡ ಬಂಧಿಸಬೇಕು ಎಂದು ಆಗ್ರಹಿಸಿದರು.
ಆ ವ್ಯಕ್ತಿಯನ್ನು ಬಂಧಿಸಿದರೆ ಈ ಪ್ರಕರಣದ ಹಿಂದಿರುವ ನಿಜವಾದ ಶಡ್ಯಂತ್ರ ಬಯಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಒಬ್ಬರ ಮನೆ ಮುಂದೆ ಹೋಗಿ ಗುಂಡು ಹಾರಿಸುವಂತಹ ಘಟನೆಗಳು ನಡೆಯುತ್ತಿದ್ದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಪೊಲೀಸರ ಬಗ್ಗೆ ಅಪರಾಧಿಗಳಿಗೆ ಯಾವುದೇ ಭಯವಿಲ್ಲ. ಇದಕ್ಕೆ ಕಾರಣ ಕೆಲವರು ಪೊಲೀಸರೇ ಅಪರಾಧಗಳಲ್ಲಿ ತೊಡಗಿಕೊಂಡಿರುವುದು. ಇತ್ತೀಚೆಗೆ ಕೆಲವು ಪೊಲೀಸರು ಸಸ್ಪೆಂಡ್ ಆಗಿರುವುದು ಪೊಲೀಸ್ ಇಲಾಖೆಯ ನೈತಿಕ ಕುಸಿತಕ್ಕೆ ಸಾಕ್ಷಿಯಾಗಿದೆ ಎಂದು ಬೊಮ್ಮಾಯಿ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತವನ್ನು ದಾಖಲೆ ಮಟ್ಟದ ಆಡಳಿತ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ಆಡಳಿತದ ಹಿನ್ನಲೆಯಲ್ಲಿ ಹಲವು ಕಪ್ಪು ಚುಕ್ಕೆಗಳು ಸೇರುತ್ತಿವೆ. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವ ಸಂಗತಿ ಅಲ್ಲ ಎಂದು ಅವರು ಟಾಂಗ್ ನೀಡಿದರು.
ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಗಮನಿಸಿದರೆ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿರುವ ಅನುಮಾನ ಉಂಟಾಗುತ್ತಿದೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿರುವುದು ಈ ಪ್ರಕರಣದ ಮೇಲೆ ಮತ್ತಷ್ಟು ಸಂಶಯ ಮೂಡಿಸಿದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.



