ಚಾಮರಾಜನಗರ: ಶನಿ ಅಮಾವಾಸ್ಯೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಮಲೆ ಮಹದೇಶ್ವರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆಗಳಲ್ಲಿ ಭಾಗವಹಿಸಿದ್ದಾರೆ.
ನಿನ್ನೆಯಿಂದಲೇ ಭಕ್ತರ ಆಗಮನ ಹೆಚ್ಚಾಗಿದ್ದು, ಮಲೆ ಮಹದೇಶ್ವರ ಬೆಟ್ಟದ ದೇವಾಲಯ ಆವರಣ ಭಕ್ತರಿಂದ ಕಿಕ್ಕಿರಿದು ತುಂಬಿದೆ. ಬೆಳಗ್ಗಿನಿಂದಲೇ ದರ್ಶನಕ್ಕಾಗಿ ಉದ್ದ ಸಾಲಿನಲ್ಲಿ ನಿಂತ ಭಕ್ತರು ಮಾದಪ್ಪನ ದರ್ಶನ ಪಡೆದು ತಮ್ಮ ಭಕ್ತಿಭಾವ ಸಮರ್ಪಿಸಿದ್ದಾರೆ.
ಭಕ್ತರು ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಹಾಗೂ ಬಸವ ರಥ ಸೇರಿದಂತೆ ಹಲವು ವಿಶೇಷ ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಪ್ರಾರ್ಥಿಸಿದ್ದಾರೆ.
ಶನಿ ಅಮಾವಾಸ್ಯೆಯಂದು ಮಾದಪ್ಪನ ದರ್ಶನ ಪಡೆದರೆ ವಿಶೇಷ ಪುಣ್ಯ ಲಭಿಸುತ್ತದೆ ಎಂಬ ನಂಬಿಕೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.
ಭಕ್ತರ ಹೆಚ್ಚಿದ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಆಡಳಿತ ಮಂಡಳಿ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದು, ದರ್ಶನ, ಪ್ರಸಾದ ವಿತರಣೆ ಹಾಗೂ ವಾಹನ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ.



