ಅನಾರೋಗ್ಯದ ಹಿನ್ನೆಲೆ ಅಮೇರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯವನ್ನು ಫೋನ್ ಮೂಲಕ ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವಣ್ಣ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್ಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.