ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮೀಣ ಪ್ರದೇಶದ ಅಮಾಯಕ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತಪಾಸಣೆ ನಡೆಸಿ ನಕಲಿ ವೈದ್ಯರಿಗೆ ನೋಟಿಸ್ ನೀಡುವುದರ ಜೊತೆಗೆ ದಂಡ ವಿಧಿಸಲಾಗುತ್ತಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಸುಭಾಷ ದೈಗೊಂಡ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಕುಸಲಾಪೂರ ಗ್ರಾಮಕ್ಕೆ ದಾಳಿ ನಡೆಸಿದ ವೇಳೆ, ನಕಲಿ ವೈದ್ಯ ಆಸ್ಪತ್ರೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ಇದೇ ವೇಳೆ ಆದ್ರಳ್ಳಿ ಗ್ರಾಮದಲ್ಲಿ ನಡೆಸಿದ ತಪಾಸಣೆಯಲ್ಲಿ ಅಕ್ರಮವಾಗಿ ವೈದ್ಯಕೀಯ ಸೇವೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ ₹50 ಸಾವಿರ ದಂಡ ವಿಧಿಸಲಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಕೆಲವರು ತಜ್ಞ ವೈದ್ಯರ ಬಳಿ ಸಹಾಯಕರಾಗಿ ಕೆಲಸ ಮಾಡಿ ಬಳಿಕ ತಾವೇ ವೈದ್ಯರೆಂದು ಬಿಂಬಿಸಿಕೊಂಡು ಗ್ರಾಮೀಣ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಅಗತ್ಯ ವೈದ್ಯಕೀಯ ಪರೀಕ್ಷೆಗಳಿಲ್ಲದೆ ಹೆಚ್ಚಿನ ಪ್ರಮಾಣದ ಔಷಧಿ ಹಾಗೂ ಇಂಜೆಕ್ಷನ್ ನೀಡುತ್ತಿರುವುದು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ತಾಲೂಕಿನ ಎಲ್ಲ ಗ್ರಾಮಗಳಲ್ಲಿ ನಕಲಿ ವೈದ್ಯರು, ಅಕ್ರಮ ಆಸ್ಪತ್ರೆಗಳು ಹಾಗೂ ನಕಲಿ ಪ್ರಯೋಗಾಲಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬಂದಿದೆ.
“ತಾಲೂಕಿನ ವಿವಿಧೆಡೆ ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ಕುಸಲಾಪೂರಕ್ಕೆ ಭೇಟಿ ನೀಡಿದಾಗ ನಕಲಿ ವೈದ್ಯ ಆಸ್ಪತ್ರೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ಆದ್ರಳ್ಳಿಯಲ್ಲಿ ದಾಳಿ ನಡೆಸಿ ₹50 ಸಾವಿರ ದಂಡ ವಿಧಿಸಲಾಗಿದೆ. ಇಂತಹ ಕಾರ್ಯಾಚರಣೆ ಮುಂದುವರಿಯಲಿದೆ.”
– ಡಾ. ಸುಭಾಷ ದೈಗೊಂಡ, ತಾಲೂಕು ಆರೋಗ್ಯಾಧಿಕಾರಿ



