HomeIndia Newsಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್: ಇನ್ಮುಂದೆ 9 ಸಿಲಿಂಡರ್ ಬದಲು 4 ಮಾತ್ರ ಸಿಗಲಿದೆ!

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್: ಇನ್ಮುಂದೆ 9 ಸಿಲಿಂಡರ್ ಬದಲು 4 ಮಾತ್ರ ಸಿಗಲಿದೆ!

For Dai;y Updates Join Our whatsapp Group

Spread the love

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದೆ. ಹೊಸ ನಿಯಮದ ಪ್ರಕಾರ, ಯೋಜನೆಯ ಫಲಾನುಭವಿಗಳು ಇನ್ನುಮುಂದೆ ವರ್ಷಕ್ಕೆ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಹೆಚ್ಚುವರಿ ಸಬ್ಸಿಡಿ ಪಡೆಯಲಿದ್ದಾರೆ.

ಇಲ್ಲಿಯವರೆಗೆ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಒಂಬತ್ತು ಸಬ್ಸಿಡಿ ಸಿಲಿಂಡರ್‌ಗಳ ಸೌಲಭ್ಯ ಲಭ್ಯವಿತ್ತು. ಇದೀಗ ಆ ಸಂಖ್ಯೆಯನ್ನು ನಾಲ್ಕಕ್ಕೆ ಇಳಿಸಲಾಗಿದ್ದು, ದೇಶದಾದ್ಯಂತ ಯೋಜನೆಯಡಿ ಸಂಪರ್ಕ ಪಡೆದಿರುವ 10.60 ಕೋಟಿ ಕುಟುಂಬಗಳ ಮೇಲೆ ಈ ಬದಲಾವಣೆ ಅನ್ವಯವಾಗಲಿದೆ.

ಕೇಂದ್ರ ಸರ್ಕಾರದ ಪ್ರಕಾರ, ಸರಾಸರಿ ಬಳಕೆಯ ಅಂಕಿ-ಅಂಶಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಜ್ವಲ ಯೋಜನೆಯಡಿ ಸಂಪರ್ಕ ಪಡೆದ ಬಹುತೇಕ ಕುಟುಂಬಗಳು ವರ್ಷಕ್ಕೆ ಸರಾಸರಿ 4 ರಿಂದ 5 ಸಿಲಿಂಡರ್‌ಗಳನ್ನು ಮಾತ್ರ ಬಳಸುತ್ತಿರುವುದರಿಂದ, ನೈಜ ಬಳಕೆಗೆ ಅನುಗುಣವಾಗಿ ಸಬ್ಸಿಡಿ ವ್ಯವಸ್ಥೆಯನ್ನು ಮರುಸಂಘಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2016ರಲ್ಲಿ ಆರಂಭಗೊಂಡ ಉಜ್ವಲ ಯೋಜನೆಯಡಿ ಆರಂಭದಲ್ಲಿ ಫಲಾನುಭವಿಗಳಿಗೆ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳನ್ನು ನೀಡಲಾಗುತ್ತಿತ್ತು. ಬಳಿಕ ಈ ಸಂಖ್ಯೆಯನ್ನು ಒಂಬತ್ತಕ್ಕೆ ಇಳಿಸಲಾಗಿತ್ತು. ಇದೀಗ ಮತ್ತೊಮ್ಮೆ ಪರಿಷ್ಕರಣೆ ಮಾಡಿ ನಾಲ್ಕು ಸಿಲಿಂಡರ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಇದೇ ವೇಳೆ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಹಾಗೂ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿನ ಸವಾಲುಗಳ ನಡುವೆಯೂ ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾರತ ತನ್ನ ಎಲ್‌ಪಿಜಿ ಅಗತ್ಯದ ಬಹುಪಾಲನ್ನು ಆಮದು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪರ್ಯಾಯ ಪೂರೈಕೆ ಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ. ಓಮನ್, ಅಮೆರಿಕ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಿಂದ ಎಲ್‌ಪಿಜಿ ಆಮದು ಹೆಚ್ಚಿಸುವ ಮೂಲಕ ಪೂರೈಕೆ ಸರಪಳಿಯನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪ್ರವೀಣ್ ಮಲ್ ಖನುಜಾ ಮಾತನಾಡಿ, ಉಜ್ವಲ ಯೋಜನೆಯ ಗ್ರಾಹಕರ ಸರಾಸರಿ ಬಳಕೆಯನ್ನು ಆಧರಿಸಿ ವರ್ಷಕ್ಕೆ ನಾಲ್ಕು ಸಿಲಿಂಡರ್‌ಗಳಿಗೆ ತಲಾ ₹300 ನೇರ ಸಬ್ಸಿಡಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ವೆಚ್ಚ ಏರಿಕೆಯಾಗಿದ್ದರೂ ಗ್ರಾಹಕರಿಗೆ ಕಡಿಮೆ ದರದಲ್ಲಿ ಸಿಲಿಂಡರ್ ಒದಗಿಸಲು ಸರ್ಕಾರ ಬೆಲೆ ನಿಯಂತ್ರಣ ಕ್ರಮಗಳನ್ನು ಮುಂದುವರಿಸಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿ ಸಬ್ಸಿಡಿಯೊಂದಿಗೆ ಮೊದಲ ನಾಲ್ಕು ಸಿಲಿಂಡರ್‌ಗಳು ಕಡಿಮೆ ದರದಲ್ಲಿ ಲಭ್ಯವಾಗಲಿವೆ.

ಕೇಂದ್ರ ಸರ್ಕಾರ ಕಳೆದ ಎರಡು ಹಣಕಾಸು ವರ್ಷಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದು, ಇಂಧನ ಬೆಲೆ ಏರಿಕೆಯ ಪರಿಣಾಮ ಜನಸಾಮಾನ್ಯರ ಮೇಲೆ ಕಡಿಮೆಯಾಗುವಂತೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದೆ.

ಗ್ರಾಮೀಣ ಭಾಗದ ಮಹಿಳೆಯರಿಗೆ ಶುದ್ಧ ಇಂಧನ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಜ್ವಲ ಯೋಜನೆಯು ಮುಂದಿನ ದಿನಗಳಲ್ಲೂ ಪರಿಣಾಮಕಾರಿಯಾಗಿ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!