ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಅನಗತ್ಯವಾಗಿ ದುರ್ಬಳಕೆ ಮಾಡಿದವರ ವಿರುದ್ಧ ಬೆಂಗಳೂರು ಜಲಮಂಡಳಿ ಕ್ರಮ ಕೈಗೊಂಡಿದೆ.
ನಗರದಲ್ಲಿ ವಾಹನ ತೊಳೆಯಲು ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕುಡಿಯುವ ಕಾವೇರಿ ನೀರನ್ನು ಬಳಸಿದ 692 ಮಂದಿಗೆ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದ್ದು, ಒಟ್ಟು 34.60 ಲಕ್ಷ ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನಗರದ ವಿವಿಧ ವಲಯಗಳಲ್ಲಿ ಪರಿಶೀಲನೆ ನಡೆಸಿ ನೀರು ದುರ್ಬಳಕೆ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 206 ಮಂದಿಗೆ ದಂಡ ವಿಧಿಸಲಾಗಿದೆ. ಪಶ್ಚಿಮ ವಲಯದಲ್ಲಿ 165, ಕೇಂದ್ರ ವಲಯದಲ್ಲಿ 135, ಪೂರ್ವ ವಲಯದಲ್ಲಿ 100 ಹಾಗೂ ಉತ್ತರ ವಲಯದಲ್ಲಿ 86 ಮಂದಿಯಿಂದ ದಂಡ ವಸೂಲಿ ಮಾಡಲಾಗಿದೆ.
ಇದೇ ವೇಳೆ, ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸೂಚಿಸಿರುವುದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕುಡಿಯುವ ನೀರಿನ ಅಗತ್ಯತೆ ಇರುವ ಸಂದರ್ಭದಲ್ಲಿ ನೀರು ಬಿಡುಗಡೆ ಮಾಡುವ ಆದೇಶದ ಬಗ್ಗೆ ರೈತ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.
ಜುಲೈ 31ರಂದು ಬೆಂಗಳೂರಿನಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ:
ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜುಲೈ 31ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಜಲರೇಚಕ ಯಂತ್ರಾಗಾರಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಸಾರ್ವಜನಿಕರು ಅಗತ್ಯವಿರುವಷ್ಟು ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಂಡು, ನೀರನ್ನು ಮಿತವಾಗಿ ಬಳಸುವಂತೆ ಜಲಮಂಡಳಿ ಮನವಿ ಮಾಡಿದೆ.
ನಗರಕ್ಕೆ ನಿರಂತರ ಹಾಗೂ ವಿಶ್ವಾಸಾರ್ಹ ನೀರು ಪೂರೈಕೆ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಕೋರಿದ್ದಾರೆ.



