ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ, ಗದಗ ಜಿಲ್ಲೆಯ ನರೇಗಲ್ಲ ಹೋಬಳಿಯ ಹಲವು ಗ್ರಾಮಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರ ಆರೋಪದಂತೆ, ಪ್ರತಿದಿನ ಬೆಳಗ್ಗೆ 6ರಿಂದ 7.40ರವರೆಗೆ ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಇದೇ ವೇಳೆ ಕೃಷಿ ಪಂಪ್ಸೆಟ್ಗಳಿಗೆ ತ್ರಿಫೇಸ್ ವಿದ್ಯುತ್ ನೀಡಲಾಗುತ್ತಿದ್ದು, ಮನೆಗಳನ್ನು ಕತ್ತಲಲ್ಲಿ ಬಿಡಲಾಗುತ್ತಿದೆ ಎನ್ನುವುದು ಅವರ ಆರೋಪ. ಸಂಜೆ ವೇಳೆಯಲ್ಲೂ ವಿದ್ಯುತ್ ಕಡಿತವಾಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ, ಮಕ್ಕಳ ಓದು, ಮನೆ ಕೆಲಸ ಹಾಗೂ ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರುತ್ತಿದೆ.
ಮಳೆಗಾಲದಲ್ಲಿ ಸಂಜೆ ವಿದ್ಯುತ್ ಇಲ್ಲದ ಕಾರಣ ಫ್ಯಾನ್ಗಳು ಸ್ಥಗಿತಗೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರು ರಾತ್ರಿ ನಿದ್ದೆಯಿಲ್ಲದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸುವುದು ಅಗತ್ಯವಾದರೂ, ಅದಕ್ಕಾಗಿ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಸರಿಯಲ್ಲ. ಕೃಷಿ ಹಾಗೂ ಗೃಹ ಬಳಕೆಯ ವಿದ್ಯುತ್ ಪೂರೈಕೆಯ ನಡುವೆ ಸಮತೋಲನ ಸಾಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಡಿತದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



