ಮಂಡ್ಯ:- ವಯೋಸಹಜ ಕಾಯಿಲೆಯಿಂದ ಬುಧವಾರ ನಿಧನ ಹೊಂದಿದ್ದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಿನಲ್ಲಿ ಜರುಗಿತು.
ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ಒಕ್ಕಲಿಗ ಸಂಪ್ರದಾಯದಂತೆ ನಡೆದಿದೆ. ಬಳಿಕ ಮೊಮ್ಮಗ ಅಮರ್ತ್ಯ ಹೆಗ್ಡೆ, ತಮ್ಮ ಅಜ್ಜ ಎಸ್.ಎಂ.ಕೃಷ್ಣ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ರಾಜಕೀಯ ಮುತ್ಸದಿ ಎಸ್ಎಂಕೆ ಪಂಚಭೂತಗಳಲ್ಲಿ ಲೀನರಾದರು.
ಅಗ್ನಿ ಸ್ಪರ್ಶಕ್ಕೂ ಮುನ್ನ ಎಸ್ಎಂ ಕೃಷ್ಣ ಅವರ ಚಿತೆಗೆ ಪತ್ನಿ ಪ್ರೇಮಾ, ಪುತ್ರಿಯರು, ಸಂಬಂಧಿಕರು ಗಂಧದ ಕಟ್ಟಿಗೆ ಇಟ್ಟು ವಿದಾಯ ಹೇಳಿದರು. ಬಳಿಕ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೃತರ ಗೌರವಾರ್ಥವಾಗಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯ್ತು.
ಇನ್ನು ಚಿತೆಗೆ 1 ಟನ್ ಶ್ರೀಗಂಧದ ಕಟ್ಟಿಗೆ ಜತೆ ಇತರೆ ಕಟ್ಟಿಗೆ ಹಾಗೂ 50 ಕೆಜಿ ತುಪ್ಪದಿಂದ ಅಭಿಷೇಕ ಕ್ರಿಯೆ ಕಾರ್ಯ ಮಾಡಲಾಯ್ತು. ಇದಕ್ಕೂ ಮೊದಲು ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಸಾಕಷ್ಟು ರಾಜಕೀಯ ಮುಖಂಡರು SM ಕೃಷ್ಣರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.