HomeGadag Newsಮಣ್ಣಿನ ಆರೋಗ್ಯವೇ ಸುಸ್ಥಿರ ಕೃಷಿಯ ಅಡಿಪಾಯ: ಚೇತನಾ ಪಾಟೀಲ

ಮಣ್ಣಿನ ಆರೋಗ್ಯವೇ ಸುಸ್ಥಿರ ಕೃಷಿಯ ಅಡಿಪಾಯ: ಚೇತನಾ ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಣ್ಣಿನ ಫಲವತ್ತತೆ ಕಾಪಾಡಿ ಕೃಷಿಯನ್ನು ಸುಸ್ಥಿರಗೊಳಿಸುವ ಉದ್ದೇಶದಿಂದ ಐಸಿಎಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ ಹಾಗೂ ಕೃಷಿ ಇಲಾಖೆ, ಗದಗ ಸಹಯೋಗದಲ್ಲಿ ಹಮ್ಮಿಕೊಂಡಿರುವ ಖೇತ್ ಬಚಾವೋ ಅಭಿಯಾನಕ್ಕೆ ಡಿ.ಎಸ್. ರಾಮೇನಹಳ್ಳಿಯಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸಸಿಗೆ ನೀರೆರೆಯುವ ಮೂಲಕ ಅಭಿಯಾನ ಉದ್ಘಾಟಿಸಿ ಮಾತನಾಡಿ, ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ರಾಸಾಯನಿಕ ಗೊಬ್ಬರಗಳ ತಯಾರಿಕೆಗೆ ಅಗತ್ಯ ಕಚ್ಚಾ ವಸ್ತುಗಳ ಕೊರತೆಯಿಂದ ಮುಂದಿನ ದಿನಗಳಲ್ಲಿ ಗೊಬ್ಬರಗಳ ಲಭ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರು ಮಣ್ಣಿನ ಪರೀಕ್ಷೆ ಆಧರಿಸಿ ಗೊಬ್ಬರ ಬಳಕೆ ಮಾಡುವುದರ ಜೊತೆಗೆ ಸಾವಯವ ಪರ್ಯಾಯಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ರಾಸಾಯನಿಕ ಗೊಬ್ಬರಗಳ ನಿರಂತರ ಮತ್ತು ಅತಿಯಾದ ಬಳಕೆಯಿಂದ ಮಣ್ಣಿನ ಗುಣಮಟ್ಟ ಕುಸಿಯುತ್ತಿದ್ದು, ಬೆಳೆಗಳ ಇಳುವರಿಯ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಪರಿಕರಗಳ ಬಳಕೆಯಿಂದ ಮಣ್ಣಿನ ಆರೋಗ್ಯ ಕಾಪಾಡಿ ಉತ್ತಮ ಇಳುವರಿ ಪಡೆಯಬಹುದು ಎಂದು ಹೇಳಿದರು.

ಮುಂಡರಗಿ ಸಹಾಯಕ ಕೃಷಿ ನಿರ್ದೇಶಕ ಡಾ. ಪ್ರಣೇಶ ಹಾದಿಮನಿ ಮಾತನಾಡಿ, ಮಣ್ಣು ಜೀವಂತ ಸಂಪನ್ಮೂಲವಾಗಿದ್ದು, ಅದರಲ್ಲಿರುವ ಉಪಯುಕ್ತ ಸೂಕ್ಷ್ಮಾಣು ಜೀವಿಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಸಾವಯವ ಹಾಗೂ ನೈಸರ್ಗಿಕ ಕೃಷಿಯತ್ತ ರೈತರು ಮುಖ ಮಾಡದಿದ್ದರೆ ಭೂಮಿ ಬರಡಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಚೇತನ ಬಾಬು ಆರ್.ಟಿ. ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳ ವೈಜ್ಞಾನಿಕ ಬೇಸಾಯ ಪದ್ಧತಿ ಮತ್ತು ಕೀಟ-ರೋಗಗಳ ಹತೋಟಿಗೆ ಕಡಿಮೆ ವೆಚ್ಚದ ತಂತ್ರಜ್ಞಾನಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕೃಷಿ ವಿಸ್ತರಣೆ ವಿಜ್ಞಾನಿ ಡಾ. ಮಂಜುಪ್ರಕಾಶ ಪಾಟೀಲ ‘ಖೇತ್ ಬಚಾವೋ ಅಭಿಯಾನ’ದ ಮಹತ್ವವನ್ನು ವಿವರಿಸಿ, ಸಾವಯವ ಮತ್ತು ನೈಸರ್ಗಿಕ ಕೃಷಿ ನಮ್ಮ ಸಂಪ್ರದಾಯದ ಭಾಗವಾಗಿದ್ದು, ಇಂದಿನ ಪರಿಸ್ಥಿತಿಯಲ್ಲಿ ಮತ್ತೆ ಅದರತ್ತ ಮರಳುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿಗಳು, ಕೃಷಿ ಸಖಿಯರು, ರೈತರು ಹಾಗೂ ರೈತ ಮಹಿಳೆಯರು ಸೇರಿದಂತೆ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

“ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ ಹದಗೆಡುತ್ತಿದೆ. ಸಾವಯವ ಹಾಗೂ ನೈಸರ್ಗಿಕ ಕೃಷಿಯ ಮೂಲಕ ಮಣ್ಣನ್ನು ಸಂರಕ್ಷಿಸುವುದು ಇಂದಿನ ಅಗತ್ಯ.”

ಚೇತನಾ ಪಾಟೀಲ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!