ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದ 123 ತಾಲೂಕುಗಳಲ್ಲಿ ಬರ ಆವರಿಸಿದೆ. ಬರ ನಿರ್ವಹಣೆಗೆ 900 ಕೋಟಿ ರೂ. ಸರಕಾರ ಒದಗಿಸಿದೆ. ಆ ಪೈಕಿ 875 ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಯಲ್ಲಿದ್ದು, ತುರ್ತು ಪರಿಸ್ಥಿತಿಗೆ ಬಳಸಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ರೋಣ ಪಟ್ಟಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆಯಲ್ಲಿ ಕುಡಿಯುವ ನೀರು ಹಾಗೂ ಮೇವಿಗೆ ಹೆಚ್ಚು ಒತ್ತು ನೀಡಲಾಗಿದೆ. ರಾಜ್ಯದ 116 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. 400ಕ್ಕೂ ಹೆಚ್ಚು ಹಳ್ಳಿಗಳಿಗೆ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.
ಬರ ನಿರ್ವಹಣೆಗಾಗಿ ಶಾಸಕರ ಅಧ್ಯಕ್ಷತೆಯಲ್ಲಿ 600 ಟಾಸ್ಕ್ಫೋರ್ಸ್ ಸಭೆ ನಡೆದಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 226 ಸಭೆಗಳನ್ನು ಮಾಡಲಾಗಿದೆ. ಈ ಎಲ್ಲ ಕ್ರಮಗಳ ಮೂಲಕ ಬರ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸಲು ಕ್ರಮ ಕೈಗೊಂಡಿದ್ದೆವೆ ಎಂದು ತಿಳಿಸಿದರು.
ಬರ ಪರಿಹಾರ ಒದಗಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ 5 ತಿಂಗಳಾದರೂ ರಾಜ್ಯದ ರೈತರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಕೇಂದ್ರ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ದೆಹಲಿಯಲ್ಲಿ ರಾಜ್ಯ ಸರಕಾರ ಪ್ರತಿಭಟನೆ ದಾಖಲಿಸಿತು. ಇಷ್ಟಾದರೂ ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕಿಂತ ದೊಡ್ಡ ಅನ್ಯಾಯ ಮತ್ತೊಂದಿಲ್ಲ. ಹೀಗಾಗಿ ರಾಜ್ಯ ಸರಕಾರವೇ ಮೊದಲ ಹಂತವಾಗಿ ಪ್ರತಿ ರೈತರಿಗೆ 2 ಸಾವಿರ ರೂ.ಗಳಂತೆ ಒಟ್ಟು 34 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದರೆ ತಕ್ಷಣ ಅದನ್ನು ರೈತರಿಗೆ ವರ್ಗಾಯಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ರಾಜ್ಯದಲ್ಲಿ 2018ರಿಂದ 2022ರವರೆಗೆ 64 ತಾಲೂಕುಗಳನ್ನು ರಚಿಸಲಾಯಿತು. ಆ ಪೈಕಿ ಹಿಂದಿನ ಸರಕಾರದ ಅವಧಿಯಲ್ಲಿ 14 ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಾತ್ರ ಅನುಮೋದನೆ ನೀಡಿದೆ. ನಮ್ಮ ಸರಕಾರ ಮುಂದಿನ 2-3 ವರ್ಷಗಳಲ್ಲಿ 46 ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಮುಂದಾಗಲಿದೆ ಎಂದರು.
ಸ್ಟಾಂಪ್ ಡ್ಯೂಟಿ ಕಳೆದ 40 ವರ್ಷಗಳಿಂದ ಪರಿಷ್ಕರಣೆ ಆಗಿಲ್ಲ. ಕೆಲವು ಸ್ಟಾಂಪ್ ಡ್ಯೂಟಿಗಳನ್ನು ಹೆಚ್ಚಳ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಸ್ಟಾಂಪ್ ಡ್ಯೂಟಿಗಳನ್ನು ಪರಿಶೀಲನೆ ಮಾಡಿ ರಾಜ್ಯದಲ್ಲಿ ಜಾರಿಗೆ ತರಲಾಗಿತ್ತು. ರೈತರಿಗೆ ಅನಾನುಕೂಲವಾದರೆ ಸ್ಟಾಂಪ್ ಡ್ಯೂಟಿ ಪರಿಷ್ಕರಣೆ ಮಾಡಲಾಗುವುದು ಎಂದರು.
ಬೆಂಗಳೂರು ಬ್ಲಾಸ್ಟ್ ಪ್ರಕರಣ ಕುರಿತು ಮಾತನಾಡಿದ ಕೃಷ್ಣ ಭೈರೇಗೌಡ, ಗಲಭೆ ಮಾಡಿಸುವುದೇ ಬಿಜೆಪಿಯ ಕೆಲಸವಾಗಿದೆ. ಬೆಂಗಳೂರಿನಲ್ಲಿ ನಡೆದಿರುವುದು ದುರದೃಷ್ಟಕರ ಘಟನೆ. ಸರ್ಕಾರ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡುತ್ತಿದೆ. ಘಟನೆ ಯಾಕೆ, ಹೇಗೆ ನಡೆದಿದೆ ಎಂಬುದು ತನಿಖೆ ಆಗಬೇಕು. ಪ್ರಸ್ತುತವಾಗಿ ಘಟನೆಯಲ್ಲಿ ಗಾಯಾಳುಗಳ ಚಿಕಿತ್ಸೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಪಾಕಿಸ್ತಾನ ಜಿಂದಾಬಾದ್’ ಘಟನೆಗೆ ಖಂಡನೆ
ಸಚಿವ ಎಚ್.ಕೆ. ಪಾಟೀಲ ಮಾತನಾಡಿ, `ಪಾಕಿಸ್ತಾನ್ ಜಿಂದಾಬಾದ್’ ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿದರು. ಶಕ್ತಿ ಸೌಧದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪಾಲುದಾರರಾದವರನ್ನು ಶಿಕ್ಷೆಗೆ ಒಳಪಡಿಸಲು ಸರ್ಕಾರ ಸಿದ್ಧವಿದೆ. ಈ ಘೋಷಣೆ ಕೂಗಲು ಪ್ರಚೋದನೆ ನೀಡಿದವರನ್ನು ಸರ್ಕಾರ ಬಿಡಲು ಸಾಧ್ಯವಿಲ್ಲ. ಈ ಘಟನೆ ಹಿಂದೆ ಕಾಣದ ಕೈಗಳಿವೆ. ಅದನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಎಚ್.ಕೆ. ಪಾಟೀಲ ಹೇಳಿದರು. ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಎರಡು ದಿನಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರಕಾರದ ಐದು ಗ್ಯಾರಂಟಿಗಳು ಜನಮನಕ್ಕೆ ತಲುಪಿವೆ. ಗಜೇಂದ್ರಗಡ ಹಾಗೂ ರೋಣ ತಾಲೂಕಿನಲ್ಲಿ ಗ್ಯಾರಂಟಿ ಕಾರ್ಯಕ್ರಮಗಳು ಶೇ. 99ರಷ್ಟು ಜನರಿಗೆ ತಲುಪಿರುವುದು ಸಂತೋಷ ತಂದಿದೆ. ಈ ಹಿನ್ನೆಲೆಯಲ್ಲಿ ಗಜೇಂದ್ರಗಡ-ಕಾಲಕಾಲೇಶ್ವರ ಗುಡ್ಡಕ್ಕೆ ಕೇಬಲ್ ಕಾರ್ (ರೋಪ್ ವೇ) ಕೊಡುಗೆ ಮಾಡುವ ಜೊತೆಗೆ ಈ ವರ್ಷವೇ ಪೂರ್ಣಗೊಳಿಸಲಾಗುವುದು.
– ಎಚ್.ಕೆ. ಪಾಟೀಲ.
ಕಾನೂನು, ಪ್ರವಾಸೋದ್ಯಮ ಸಚಿವರು.