ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚಿನ ದಿನಗಳಲ್ಲಿ ಸಹಕಾರ ಸಂಘಗಳು ಸರಿಯಾದ ಮಾರ್ಗದರ್ಶನವಿಲ್ಲದೇ ಕುಂಠಿತಗೊಂಡಿವೆ. ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ತರಬೇತಿಯ ಅವಶ್ಯಕತೆ ಇದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಗದಗ ಜಿಲ್ಲಾ ಸಹಕಾರ ಯೂನಿಯನ್ಗಳು ನಡೆಸುವ ಇಂತಹ ಕಾರ್ಯಕ್ರಮಗಳ ಮೂಲಕ ತರಬೇತಿ ಪಡೆದು ಸಹಕಾರ ಸಂಘಗಳು ಉತ್ತಮವಾಗಿ ನಡೆಸಿಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಎಚ್.ಜಿ. ಹಿರೇಗೌಡ್ರ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ, ಸಹಕಾರ ಇಲಾಖೆ, ಗದಗ ಹಾಗೂ ಧಾರವಾಡ ಹಾಲು ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗದಗ ಹಾಗೂ ನರಗುಂದ ತಾಲೂಕುಗಳ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಏರ್ಪಡಿಸಿದ್ದ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ದಿನಕ್ಕೆ 1 ಕೋಟಿ ಲೀ. ಹಾಲು ಉತ್ಪಾದನೆಯಾಗುತ್ತಿದೆ. ಕಾರಣ ಸದಸ್ಯರು ಹಾಲಿನ ಸಂಗ್ರಹಣೆ ಹೆಚ್ಚಿಸುವುದಲ್ಲದೇ ಗುಣಮಟ್ಟದ ಹಾಲನ್ನು ನೀಡುವುದು ಸೂಕ್ತ. ಧಾರವಾಡ ಹಾಲು ಒಕ್ಕೂಟ ಹಾಲು ಉತ್ಪಾದಕರ ಹಾಗೂ ಗ್ರಾಹಕರ ಹಿತರಕ್ಷಣೆ ಮಾಡುವ ಕೆಲಸದಲ್ಲಿ ನಿರತವಾಗಿದೆ. ಹಾಲಿನ ಸಂಗ್ರಹದೊಂದಿಗೆ ಮಾರಾಟದ ಸಮಸ್ಯೆಯೂ ತಲೆದೋರಿದ್ದು, ಲಿಟರ್ ಹಾಲಿನ ಪ್ರಮಾಣಕ್ಕೆ 50 ಮಿ.ಲೀ. ಹಾಲನ್ನು ಅಧಿಕವಾಗಿ ಸೇರಿಸಿ ಹಾಲಿನ ದರವನ್ನು 2 ರೂಪಾಯಿಗಳಷ್ಟು ಹೆಚ್ಚುವರಿ ಮಾಡಿದೆ ಎಂದು ಹೇಳಿದರು.
ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಅರವಿಂದ ಎನ್.ನಾಗಜ್ಜನವರ ಮಾತನಾಡುತ್ತಾ, ಸಂಘದ ಸುಸ್ತಿರ ಬೆಳವಣಿಗೆಗೆ ಪ್ರತಿ ವರ್ಷ ಲೆಕ್ಕಪರಿಶೋಧನೆ ಅತೀ ಅವಶ್ಯ. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡ ಸದಸ್ಯರಿಗೆ ವರ್ಷದ ಎಲ್ಲಾ 365 ದಿನಗಳಲ್ಲೂ ಆದಾಯದ ಹರಿವಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಂದಾಗಿ ರೈತರಿಂದು ಅತಿವೃಷ್ಟಿ-ಅನಾವೃಷ್ಟಿ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗಗಳು ಕಡಿಮೆಗೊಂಡಿವೆ. ಗ್ರಾಮೀಣ ಮಹಿಳೆಯರು, ಕೃಷಿ ಕಾರ್ಮಿಕರು, ಯುವಕರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಮಾರುಕಟ್ಟೆಯ ಮೇಲೆ ಹಾಲಿನ ಗುಣಮಟ್ಟದ ಪ್ರಭಾವ ಕುರಿತು, ಧಾರವಾಡ ಹಾಲು ಒಕ್ಕೂಟದ ಷಣ್ಮುಖ ಶಿರೋಳ, ಶುದ್ಧ ಹಾಗೂ ಅಧಿಕ ಹಾಲು ಉತ್ಪಾದನೆ ಮತ್ತು ಕೆಚ್ಚಲುಬಾವು ಕುರಿತು ಡಾ. ವಿಶ್ರಾಂತ ಜಂಟಿ ನಿರ್ದೇಶಕ ಎಂ.ಬಿ. ಮಡಿವಾಳರ, ಸಹಕಾರ ಸಂಘಗಳಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಕುರಿತು ನಿವೃತ್ತ ಸಹಾಯಕ ವ್ಯವಸ್ಥಾಪಕ ಬಿ.ಪಿ. ಹಿರೇಮಠ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಪುಷ್ಪಾ ಕೆ.ಕಡಿವಾಳ, ಗದಗ ತಾಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಶಾಂತಾ ಎಚ್.ಎಂ., ಸಿ.ಎಚ್. ಪಾಟೀಲ, ದಯಾನಂದ ಹುಗ್ಗಿ, ದಿಲೀಪ ಆಯ್.ನದಾಫ್, ಕಿರಣಕುಮಾರ ಹುಗ್ಗಿ ಉಪಸ್ಥಿತರಿದ್ದರು.
ಅನ್ನಪೂರ್ಣ ಸ.ರಿತ್ತಿ ಪ್ರಾರ್ಥಿಸಿದರು. ಗದಗ ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಎಸ್.ಕರಿಯಪ್ಪನವರ ಸ್ವಾಗತಿಸಿ, ನಿರೂಪಿಸಿದರು. ರಶೀದಾಬಾನು ಸಿ.ಯಲಿಗಾರ ವಂದಿಸಿದರು.
ಗದಗ ಜಿಲ್ಲಾ ಸಹಕಾರ ಯೂನಿಯನ್ದ ನಿರ್ದೇಶಕ ಎಸ್.ಕೆ. ಕುರಡಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಗದಗ ಜಿಲ್ಲಾ ಸಹಕಾರ ಯೂನಿಯನ್ ಮೂಲಕ ಜರುಗುವ ಹಲವಾರು ವಿವಿಧ ತರಬೇತಿ ಕಾರ್ಯಕ್ರಮಗಳಲ್ಲಿ ಅಳಡಿಸಿರುವ ವಿಶೇಷ ಉಪಯುಕ್ತ ವಿಷಯಗಳ ಕುರಿತು ಪರಿಣಿತ ಉಪನ್ಯಾಸಕರನ್ನು ಕರೆಸಿ ತರಬೇತಿ ನೀಡುತ್ತಾ ಬರಲಾಗುತ್ತಿದೆ. ಕಾರಣ ಇಂದು ತರಬೇತಿಗೆ ಆಗಮಿಸಿದ ತಾವೆಲ್ಲರೂ ಈ ತರಬೇತಿಯ ಸದುಪಯೋಗ ಪಡೆದುಕೊಂಡು ತಮ್ಮ ಸಂಘಗಳ ಕಾರ್ಯವೈಖರಿಗಳಲ್ಲಿ ಪ್ರಗತಿ ತರುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.



