ವಿಜಯಸಾಕ್ಷಿ ಸುದ್ದಿ, ರೋಣ: ಕ್ರೀಡೆಗಳು ಕೇವಲ ದೇಹವನ್ನು ಗಟ್ಟಿಗೊಳಿಸುವ ಬದಲಾಗಿ ಸಮಾಜಕ್ಕೆ ಉತ್ತಮ ಸಂದೇಶವನ್ನು ಪಸರಿಸುತ್ತವೆ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಜರುಗಿದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಗಳಲ್ಲಿ ಏಕತೆ, ಸಮಾನತೆ, ಭ್ರಾತೃತ್ವ ಇರುತ್ತದೆ. ಮುಖ್ಯವಾಗಿ ನಮ್ಮ ದೇಶದ ಸಂಸ್ಕೃತಿಯೂ ಇವುಗಳನ್ನೇ ಭೋದಿಸಿದ್ದು, ಕ್ರೀಡಾಪಟುಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಬೇಕು, ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸಬೇಕು. ಇಲ್ಲಿ ಸೋಲು-ಗೆಲವು ಮುಖ್ಯವಲ್ಲ, ಬದಲಾಗಿ ಪಾಲ್ಗೋಳ್ಳುವುದು ಮುಖ್ಯವಾಗಿದೆ ಎಂದರು.
ಯುವಕರು ಹಾಗೂ ವಿದ್ಯಾರ್ಥಿಗಳು ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ಇದೆ ಎಂಬುದು ಎಲ್ಲರೂ ತಿಳಿದಿರುವ ಸಂಗತಿ. ಕ್ರೀಡಾಪಟುಗಳು ಕ್ರೀಡೆಗಳಿಗಿರುವ ಮಹತ್ವವನ್ನು ಅರಿತುಕೊಂಡು, ತಮ್ಮ ನೆಚ್ಚಿನ ಕ್ರೀಡೆಯನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅಂದಾಗ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಶಾಲಾ ಮಕ್ಕಳಿಂದ ಪಥಸಂಚಲನ ನಡೆಯಿತು. ತಹಸೀಲ್ದಾರ ನಾಗರಾಜ ಕೆ, ಕ್ರೀಡಾ ಇಲಾಖೆಯ ನಿರ್ದೇಶಕ ಶರಣು ಗೋಗೇರಿ, ತಾ.ಪಂ ಇಒ ಚಂದ್ರಶೇಖರ ಕಂದಕೂರ, ಅಕ್ಷರ ದಾಸೋಹಾಧಿಕಾರಿ ಕೆ.ಎಲ್. ನಾಯಕ, ಸಿಪಿಐ ಎಸ್.ಎಸ್. ಬಿಳಗಿ, ಪಿಎಸ್ಐ ಪ್ರಕಾಶ ಬಣಕಾರ ಸೇರಿದಂತೆ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.