ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ವಕ್ಫ್ ಹೆಸರಲ್ಲಿ ಕೋಮು ಪ್ರಚೋದಿತ ಹೇಳಿಕೆ ನೀಡಿ ರಾಜ್ಯದಲ್ಲಿ ಕೋಮುದ್ವೇಷ ಹರಡಿಸುತ್ತಿರುವ ರಾಜಕಾರಣಿಗಳ ವಿರುದ್ಧ ಸರಕಾರ ಕಠಿಣ ಕ್ರಮ ವಹಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾವೇರಿ ಜಿಲ್ಲೆಯ ಸವಣೂರಿನ ಕಡಗೋಳ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮನೆ, ಅಸ್ತಿಗಳ ಮೇಲೆ ದಾಳಿ ನಡೆದಿದೆ. ಬಿಜೆಪಿ ಅಧಿಕಾರದಲ್ಲಿ ಇರುವಾಗಲೇ ವಕ್ಫ್ ಅದಾಲತ್ಗಳು ನಡೆದಿದ್ದುವು. ೨೦೦೬ರಲ್ಲಿ ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಿಕ್ಕಮಗಳೂರು ಗಾವನಹಳ್ಳಿ, ಕಡೂರಳ್ಳಿಯ ನಾಲ್ಕು ಪ್ರಕರಣಗಳಲ್ಲಿ ರೈತರ ಭೂಮಿಯನ್ನು ವಕ್ಫ್ ಖಾತೆಗೆ ಬದಲಾಯಿಸಲಾಗಿದೆ.
2003-2013ರ ಮದ್ಯೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳಾಗಿದ್ದಾಗ 7 ಆಸ್ತಿಗೆ ವಕ್ಫ್ ಎಂದು ನಮೂದು ಮಾಡಲಾಗಿದೆ. ಹೀಗೆ ಅನೇಕ ಉದಾಹರಣೆಗಳಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ.
ಹೀಗಿರುವಾಗ, ಬಿಜೆಪಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಗಲಭೆಗೆ ಪ್ರಚೋದನೆ ನೀಡಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡುತ್ತಿದೆ. ಜನರು ಇಂತಹ ವದಂತಿಗಳಿಗೆ ಕಿವಿಗೊಟ್ಟು ಪ್ರಚೋದಿತರಾಗಿ ಬಲಿಪಶುಗಳಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.