ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಪಿ.ವಿ. ನರಸಿಂಹರಾವ್ ಪ್ರಧಾನಿಯಾಗಿದ್ದ ಸಮಯದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ತಜ್ಞರಾಗಿದ್ದ ಮನಮೋಹನ ಸಿಂಗ್ ಅವರು ದೇಶದ ಆರ್ಥಿಕ ಅಭಿವೃದ್ಧಿಗೆ ಹಾಕಿಕೊಟ್ಟ ಹಲವಾರು ಯೋಜನೆಗಳು ಯಶಸ್ವಿಯಾಗಿ ದೇಶದ ಆರ್ಥಿಕ ಸದೃಢತೆಯನ್ನು ಬೆಳೆಸಿದ್ದು, ದೇಶದ ಬಡ ಜನರ ಜೀವನ ಮಟ್ಟ ಸುಧಾರಿಸಲು ಕಾರಣವಾಗಿದ್ದನ್ನು ಮರೆಯಲಾಗದು. ಸರಳತೆ-ಸೌಜನ್ಯತೆಗೆ ಹೆಸರಾಗಿದ್ದ ಅವರು, ಎರಡು ಅವಧಿಗೆ ಪ್ರಧಾನಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದರು. ನಿಗರ್ವಿಯಾಗಿದ್ದ ಮನಮೋಹನ ಸಿಂಗ್ ಅವರ ಅಗಲಿಕೆ ನೋವಿನ ಸಂಗತಿ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.