HomeGadag Newsಜನಮನಸೂರೆಗೊಂಡ ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟ!

ಜನಮನಸೂರೆಗೊಂಡ ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟ!

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಕರ್ನಾಟಕದ ಜನಪದ ರಂಗಕಲೆಯ ವೈಶಿಷ್ಟ್ಯವನ್ನು ಸಾರುವ ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟ ಪ್ರದರ್ಶನ ಕಲಾಪ್ರೇಮಿಗಳ ಮನಸೂರೆಗೊಂಡಿತು.

ಮುಳಗುಂದ ನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ಬೆಟಗೇರಿಯ ಬಿ.ಬಿ. ಬಣ್ಣದ ಜನಪದ ಕಲಾ ಮೇಳ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಹಾಗೂ ಶ್ರೀ ಅಡವೀಂದ್ರಸ್ವಾಮಿ ಮಠದ ಶಿವಾನುಭವ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ದೊಡ್ಡಾಟ ಪ್ರದರ್ಶನಕ್ಕೆ ಗದಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ, ಸಾಹಿತಿ ಹಾಗೂ ಸಂಶೋಧಕ ಡಾ. ರಾಜೇಂದ್ರ ಎಸ್. ಗಡಾದ ಮದ್ದಳೆ ಬಾರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೊಡ್ಡಾಟ, ಸಣ್ಣಾಟ, ತೊಗಲುಗೊಂಬೆಯಾಟ ಸೇರಿದಂತೆ ಜನಪದ ಕಲೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಜೀವಂತ ಪ್ರತೀಕಗಳಾಗಿವೆ. ಜನಪದೀಯರು ಆತ್ಮೀಯತೆ, ನಂಬಿಕೆ ಹಾಗೂ ಭಾವನಾತ್ಮಕತೆಯಿಂದ ಇವುಗಳನ್ನು ತಲೆಮಾರಿನಿಂದ ತಲೆಮಾರಿಗೆ ಉಳಿಸಿಕೊಂಡು ಬಂದಿದ್ದಾರೆ ಎಂದರು.

ಜಾಗತೀಕರಣ, ನಗರೀಕರಣ ಹಾಗೂ ಕೈಗಾರೀಕರಣದ ಪರಿಣಾಮ ಅನೇಕ ಜನಪದ ಕಲೆಗಳು ನಶಿಸುವ ಹಂತದಲ್ಲಿವೆ. ಕಲಾತಂಡಗಳು ಹಾಗೂ ಕಲಾವಿದರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾವಿದರನ್ನು ಪ್ರೋತ್ಸಾಹಿಸಿ, ಕಲಾತಂಡಗಳಿಗೆ ಬೆಂಬಲ ನೀಡುವ ಮೂಲಕ ದೊಡ್ಡಾಟದಂತಹ ಅಪರೂಪದ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಜನಪದೀಯರದ್ದಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಜನಪದರಂಗ ಕಲೆಗಳಲ್ಲಿ ದೊಡ್ಡಾಟವು ವಿಶಿಷ್ಟ ಸ್ಥಾನ ಹೊಂದಿದೆ. ಭವ್ಯ ರಂಗಸಜ್ಜಿಕೆ, ವೀರೋಚಿತ ಕುಣಿತ, ಸಂಗೀತ, ವರ್ಣರಂಜಿತ ವೇಷಭೂಷಣ ಹಾಗೂ ವೀರ–ರೌದ್ರ ಪ್ರಧಾನ ಕಥಾವಸ್ತು ಇದರ ವೈಶಿಷ್ಟ್ಯವಾಗಿದೆ. ಹಿಂದೆ ರಾತ್ರಿಯಿಂದ ಬೆಳಗಿನವರೆಗೆ ನಡೆಯುತ್ತಿದ್ದ ದೊಡ್ಡಾಟಗಳು ಇದೀಗ ಕಾಲಕ್ಕೆ ತಕ್ಕಂತೆ ಸಂಕ್ಷಿಪ್ತ ರೂಪ ಪಡೆದುಕೊಂಡಿರುವುದು ಸ್ವಾಗತಾರ್ಹ. ಯುವ ಪೀಳಿಗೆ ಹಾಗೂ ಮಕ್ಕಳು ಇಂತಹ ಕಲೆಗಳನ್ನು ನೋಡಿ, ಅದರ ಮಹತ್ವ ಅರಿಯಬೇಕು ಎಂದರು.

ಶ್ರೀ ಅಡವೀಂದ್ರಸ್ವಾಮಿ ಮಠದ ದಸರಾ ಮಹೋತ್ಸವ ಸಮಿತಿ ಅಧ್ಯಕ್ಷೆ ಸುವರ್ಣ ಮದರಿಮಠ ಹಾಗೂ ಕಲಾಪೋಷಕ ಶ್ರೀನಿವಾಸ ಹುಬ್ಬಳ್ಳಿ ಮಾತನಾಡಿ, ಗದಗ–ಬೆಟಗೇರಿ ಭಾಗದಲ್ಲಿ ದೊಡ್ಡಾಟದಂತಹ ವಿಶಿಷ್ಟ ರಂಗಕಲೆ ಇನ್ನೂ ಜೀವಂತವಾಗಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ. ಇದರ ಉಳಿವಿಗೆ ಎಲ್ಲರೂ ಶ್ರಮಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿ.ಬಿ. ಬಣ್ಣದ ಜನಪದ ಕಲಾ ಮೇಳದ ಅಧ್ಯಕ್ಷ ಅಶೋಕ ಬಣ್ಣದ ಅವರು ಕಲಾ ಮೇಳ ಬೆಳೆದು ಬಂದ ಹಾದಿ ಹಾಗೂ ಮಠಮಾನ್ಯಗಳ ಸಹಕಾರವನ್ನು ಸ್ಮರಿಸಿದರು.

ಶ್ರೀಮಠದ ಧರ್ಮದರ್ಶಿ ವೇ. ಮಹೇಶ್ವರ ಸ್ವಾಮೀಜಿ ಮಾತನಾಡಿ, ಮೈಸೂರು ಅರಸರು ಹಾಗೂ ನಾಡಿನ ಮಠಮಾನ್ಯಗಳು ಜನಪದ ಕಲೆಗಳಿಗೆ ನೀಡಿದ ಪ್ರೋತ್ಸಾಹವನ್ನು ಸ್ಮರಿಸಿದರು. ಜನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಬೇಕು ಎಂದರು.

ಬಳಿಕ ಬೆಟಗೇರಿಯ ಶ್ರೀರಂಗಪ್ಪ ನಾರಾಯಣಕೇರಿ ಹಾಗೂ ಸಂಗಡಿಗರು ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟವನ್ನು ಮನೋಜ್ಞವಾಗಿ ಪ್ರದರ್ಶಿಸಿ ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾದರು.

ಅನ್ವಿಕಾ ಬಣ್ಣದ ಪ್ರಾರ್ಥಿಸಿದರು. ಜಿ.ಎಂ. ಯಾನಮಶೆಟ್ಟಿರು. ಬಿ.ಎಂ. ಬಿಳೆಯಲಿ ದೊಡ್ಡಾಟದ ಕುರಿತು ಅನಿಸಿಕೆ ಹಂಚಿಕೊಂಡರು. ಕಿರಣ ಬಣ್ಣದ ನಿರೂಪಿಸಿದರು. ಗೀತಾ ಹೂಗಾರ ವಂದಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img