ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಎಸ್ಸಿಎ ಅಧಿಕಾರಿಗಳಿಗೆ ಹೈಕೋರ್ಟ್ ಷರತ್ತುಬದ್ಧ ರಿಲಿಫ್ ನೀಡಿದೆ.
ಸಮಿತಿಯ ಅಧ್ಯಕ್ಷರಾದ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜಯರಾಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠ ಈ ಸೂಚನೆ ನೀಡಿದೆ.
ಅಲ್ಲದೆ, ಅರ್ಜಿದಾರರು ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬುದಾಗಿ ತಿಳಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಮುಂದಿನ ಆದೇಶದವರೆಗೂ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ನ್ಯಾಯಪೀಠ ಆದೇಶಿಸಿ, ಜೂನ್ 16ಕ್ಕೆ ವಿಚಾರಣೆ ಮುಂದೂಡಿತು.
ಘಟನೆ ಸಂಬಂಧ ಸರ್ಕಾರ ನ್ಯಾಯಾಂಗ ತನಿಖೆ, ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಹೈಕೋರ್ಟ್ ಸಹ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ ಎಂಬ ಅರ್ಜಿದಾರರ ವಾದವನ್ನು ಪೀಠ ಆದೇಶದಲ್ಲಿ ತಿಳಿಸಿದೆ.