ಬೆಂಗಳೂರು :- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಆದರೆ ಪರಿಹಾರ ಹೆಚ್ಚಿಸುವಂತೆ ವ್ಯಾಪಕ ಆಗ್ರಹಗಳು ಕೇಳಿ ಬಂದ ಹಿನ್ನೆಲೆ ಪರಿಹಾರ ಹೆಚ್ಚಳಕ್ಕೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬರೋಬ್ಬರಿ 18 ವರ್ಷಕ್ಕೆ RCB ಕಪ್ ಗೆದ್ದ ಖುಷಿಯಲ್ಲಿ ಜೂನ್ 4 ರಂದು ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿಯ ವಿಕ್ಟರಿ ಪರೇಡ್ ಹಮ್ಮಿಕೊಳ್ಳಲಾಗಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಈ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರದ ಆತುರದ ನಿರ್ಧಾರ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ.