ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿರೋ ಅವರು,
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 11 ಜನರು ಸಾವನ್ನಪ್ಪಿರುವುದು ಹಾಗೂ ಸುಮಾರು 30 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಸೂಕ್ತ ವ್ಯವಸ್ಥೆಗಳು, ಯೋಜನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ ಎಂದರು. ಸಂಭ್ರಮಾಚರಣೆಗಳು ನಡೆಯುತ್ತದೆ, ಆದರೆ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ.
ತುರ್ತು ಸೇವೆಗಳನ್ನು ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ ಎಂದಿದ್ದಾರೆ.