ನವದೆಹಲಿ: ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ.
ಇದು ಕನ್ನಡ ವಿರೋಧಿ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ ಹಾಗೂ ಕನ್ನಡ ಶಾಲೆಗಳನ್ನು ಪುನಾರಾರಂಭಿಸುವಂತೆ ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನವ ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಲೋಕಸಭೆ ಸ್ಪೀಕರ್ ವಿರುದ್ದ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಹತಾಶರಾಗಿದ್ದಾರೆ. ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಷಲರಂತೆ ವರ್ತಿಸುತ್ತಿದ್ದಾರೆ.
ಬೆಂಚ್ ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿ ಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದು ಹೇಳಿದರು.
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜಂಡಾ ಮಾಡಿಕೊಂಡಿದ್ದಾರೆ. ಬಹುತೇಕ ಅದೇ ಆಗಬಹುದು ಎಂದು ಹೇಳಿದರು.



