ಮಂಡ್ಯ: ಚುಂಚನಗಿರಿ ಶ್ರೀಗಳ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಪಷ್ಟನೆ ನೀಡಿದ್ದಾರೆ. ನನ್ನ ಮಾತಿನಿಂದ ಶ್ರೀಗಳಿಗೆ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಚುಂಚನಗಿರಿ ಮಠವನ್ನು ಸ್ವಾಮೀಜಿಗಳು ಅತ್ಯಂತ ಗೌರವದಿಂದ ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಟಿವಿ ವಾಹಿನಿಗಳ ಮುಖ್ಯಸ್ಥರು ತಮ್ಮ ಬಳಿ ಹೇಳಿದ್ದರು ಎಂದು ತಿಳಿಸಿದರು.
ವೇದಿಕೆಯಲ್ಲಿ ಮಾತನಾಡುವ ವೇಳೆ ಬಾಲಗಂಗಾಧರ ಶ್ರೀಗಳು ನಿರ್ಮಿಸಿರುವ ಸಂಸ್ಥೆಗಳನ್ನು ನಿರ್ಮಲಾನಂದ ಶ್ರೀಗಳು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದು ಮಾತ್ರ ಹೇಳಿದ್ದೇನೆ. ಶ್ರೀಗಳು ಮಠವನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಚುಂಚನಗಿರಿ ಶ್ರೀಗಳ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನು ಅಲ್ಲ. ನನ್ನ ಮಾತುಗಳಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಮಾತುಗಳನ್ನು ಶ್ರೀಗಳು ತಪ್ಪಾಗಿ ಅರ್ಥ ಮಾಡಿಕೊಳ್ಳಬಾರದು. ಒಂದು ವೇಳೆ ಅವರಿಗೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ರಮೇಶ್ ಬಂಡಿಸಿದ್ದೇಗೌಡ ಹೇಳಿದರು.



