ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಇತ್ತೀಚೆಗೆ ಮಾದಕ ವಸ್ತುಗಳ ಬಳಕೆ ಮಿತಿ ಮೀರುತ್ತಿರುವದರಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವುದಕ್ಕಾಗಿ ಪೊಲೀಸ್ ಇಲಾಖೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕ ವಲಯದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಶಿರಹಟ್ಟಿ ಪಿಎಸ್ಐ ಚನ್ನಯ್ಯ ದೇವೂರ ಹೇಳಿದರು.
ಅವರು ಮಂಗಳವಾರ ಶಿರಹಟ್ಟಿಯ ಪೊಲೀಸ್ ಠಾಣೆಯಿಂದ ಬೈಕ್ ರ್ಯಾಲಿ ಮೂಲಕ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ, ಸ್ಥಳೀಯ ಪ್ರಥಮದರ್ಜೆ ಕಾಲೇಜು, ಸರಕಾರಿ ಪದವಿಪೂರ್ವ ಕಾಲೇಜು, ಬಸ್ ನಿಲ್ದಾಣ, ಫಿಟ್ನೆಸ್ ಸೆಂಟರ್ಗಳಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಅನೇಕ ದುಷ್ಪರಿಣಾಮಗಳು ಎದುರಾಗುತ್ತಿವೆ. ಶಾಲಾ-ಕಾಲೇಜುಗಳಲ್ಲಿಯೂ ಸಹ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಯಿಂದ ದೂರವಿರಬೇಕು. ಶಾಲಾ-ಕಾಲೇಜು ಹಂತವು ಭವಿಷ್ಯದ ಅಡಿಪಾಯವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು. ಒಮ್ಮೆ ಮಾದಕ ವಸ್ತು ಸೇವನೆ ಪ್ರಾರಂಭಿಸಿದರೆ ಅದರಿಂದ ಹೊರಬರಲು ಕಷ್ಟಸಾಧ್ಯವಾಗುವುದರ ಜೊತೆಗೆ ಆರೋಗ್ಯವೂ ಹಾಳಾಗುತ್ತದೆ. ಆದ್ದರಿಂದ ಸಾಮಾಜಿಕ ಪಿಡುಗಾಗಿರುವ ಮಾದಕ ವಸ್ತುಗಳನ್ನು ಪ್ರತಿಯೊಬ್ಬರೂ ವಿರೋಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕೆಂದು ಹೇಳಿದರು.
ಮಾದಕ ವಸ್ತುಗಳ ಕಳ್ಳಸಾಗಣೆಯೂ ಅಪರಾಧವಾಗಿದ್ದು, ಈ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ವಿಶೇಷವಾಗಿ ಪಾಲಕರು ಸಹ ತಮ್ಮ ಮಕ್ಕಳ ದೈನಂದಿನ ಚಟುವಟಿಕೆಯ ಬಗ್ಗೆ ನಿಗಾ ವಹಿಸಬೇಕೆಂದು ಹೇಳಿದರು.