ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಗದಗ ಜಿಲ್ಲೆಯಲ್ಲಿ ಜೂನ್ 13, 15ರಂದು ಆರೆಂಜ್ ಅಲರ್ಟ್ ಹಾಗೂ ಜೂನ್ 14ರಂದು ಯಲ್ಲೋ ಅಲರ್ಟ್ ನೀಡಲಾಗಿದ್ದು, ಇದರಿಂದ ಗದಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವ ಇರುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆಯಾಗುವ ಸಂದರ್ಭದಲ್ಲಿ ಗುಡುಗು-ಸಿಡಿಲಿನಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಮನೆಯಲ್ಲಿ ಅಥವಾ ಸುರಕ್ಷಿತ ಸ್ಥಳಗಳಲ್ಲಿರ ಇರಬೇಕು. ಮಳೆಯಾಗುವ ಸಂದರ್ಭದಲ್ಲಿ ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನಕರುಗಳನ್ನು ಮೆಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವುದು.
ಭಾರೀ ಮಳೆ/ಪುವಾಹ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿ ವಾಸವಿದ್ದರೆ, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಯುವಕರು ಮತ್ತು ಸಾರ್ವಜನಿಕರು ನದಿ/ಹಳ್ಳದ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ಸೆಲ್ಫಿಗಳನ್ನು ತೆಗೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು-ನೋವುಗಳು ಸಂಭವಿಸುವ ಸಂದರ್ಭವಿರುವುದರಿಂದ ಸಾರ್ವಜನಿಕರು ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ-08372-239177 ಅಥವಾ 1077 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಕಾಲಕಾಲಕ್ಕೆ ರಾಜ್ಯ/ ಜಿಲ್ಲಾಡಳಿತ/ ತಾಲೂಕಾಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಸಾರ್ವಾಜನಿಕರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಕೋರಿದ್ದಾರೆ.