ದಾವಣಗೆರೆ:- ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆದಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿರುವ ಘಟನೆ ದಾವಣಗೆರೆಯ ಬೇತೂರ ರಸ್ತೆಯಲ್ಲಿ ಜರುಗಿದೆ.
ಘಟನೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್ ಸ್ಟೇಬಲ್ ರಘು ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ ನಾಯಕರು ಯುವಕರನ್ನ ನಿಯಂತ್ರಣ ಮಾಡಲು ಮುಂದಾಗಿದ್ದಾರೆ. ಇನ್ನು ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇನ್ನು ಕಲ್ಲು ತೂರಿದ ಕಿಡಿಗೇಡಿಗಳನ್ನ ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆಕಾರ್ಯ ನಡೆದಿದೆ. ಸಧ್ಯ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳನ್ನ ಪೊಲೀಸರು ಮುಚ್ಚಿಸಿದ್ದಾರೆ.