ಬಾಗಲಕೋಟೆ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಹಳೆಯ ಕಿಲ್ಲಾ ಓಣಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು-ಚಪ್ಪಲಿ ತೂರಾಟ ನಡೆದಿದೆ.
ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ತಲೆಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಈ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ.
ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸಿ, ವ್ಯಾಪಾರಿಗಳಿಗೆ ಸಹಾಯ ಮಾಡಿದ್ದಾರೆ. ವ್ಯಾಪಾರಿ ಜನ್ನತಬಿ ದೊಡ್ಡಮನಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಕಲ್ಲೆಸೆದವರ ಬಂಧನ ಮತ್ತು ಐಜಿಪಿ ಆಗಮಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಸಿ ಪ್ರತಿಭಟನೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ದುರಂತದ ಬಳಿಕ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಪ್ರದೇಶಗಳಲ್ಲಿ ನಿನ್ನೆ ಮಧ್ಯರಾತ್ರಿ–ಇಂದು ಮಧ್ಯರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಆದೇಶದಂತೆ, ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಿ ಓಡಾಡಲು, ಅಪಾಯಕಾರಿ ಶಸ್ತ್ರಾಸ್ತ್ರ ಬಳಕೆ, ಅನುಮತಿ ಇಲ್ಲದೆ ಸಭೆ/ಧರಣಿ ನಡೆಸಲು ನಿಷೇಧಿಸಲಾಗಿದೆ.



