ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಬಿ.ಎಸ್. ಚೇಗರಡ್ಡಿ ಹೇಳಿದರು.
ಗಜೇಂದ್ರಗಡ ನಗರದ ಪುರ್ತಗೇರಿ ಕ್ರಾಸ್ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಂಗವಾಗಿ ನಡೆದ `ಸಿಂಧೂರ-2025ʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಮೌಲ್ಯಯುತ ಬದುಕನ್ನು ನಡೆಸುವಂತಾಗಲು ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ. ಅಂತಹ ಶಿಕ್ಷಣ ಪಡೆಯುವ ವಿದ್ಯಾರ್ಥಿ ಜೀವನ ಸುವರ್ಣಯುಗ ಇದ್ದಂತೆ. ಆದ್ದರಿಂದ ಈ ಸಮಯವನ್ನು ವ್ಯರ್ಥ ಮಾಡದೆ ಶಿಕ್ಷಣದೊಂದಿಗೆ ಸಂಸ್ಕಾರ ಹೊಂದಿ ತಂದೆ-ತಾಯಿಗೆ, ಗುರು-ಹಿರಿಯರಿಗೆ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪಿಯು ಕಾಲೇಜಿನ ಚೇರಮನ್ ವೀರಯ್ಯ ವ್ಹಿ.ವಸ್ತçದ ಮಾತನಾಡಿ, ಅಂಕ ಗಳಿಕೆ ಜೊತೆಗೆ ಮಕ್ಕಳಿಗೆ ಕೌಶಲ್ಯ, ಸಂವಹನ ಕಲೆ, ಕ್ರಿಡೆ ಹಾಗೂ ಸಾಂಘಿಕ ಚಟುವಟಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ವೃದ್ಧಿಸಲು ಒತ್ತು ಕೊಡಬೇಕು. ದಿನ ನಿತ್ಯದ ಅಭ್ಯಾಸದ ಜೊತೆಗೆ ಸ್ಪರ್ಧಾತ್ಮ ವಿಷಯಗಳ ಬಗ್ಗೆ ಓದಿದರೆ ಗೆಲುವು ನಿಶ್ಚಿತ ಎಂದರು.
ಪಿಯು ಪ್ರಾಚಾರ್ಯ ವಸಂತರಾವ್ ಗಾರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು. ಆಡಳಿತ ಮಂಡಳಿ ಸದಸ್ಯರಾದ ಸದಾಶಿವ ಕರಡಿ, ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಶಾಲೆಯ ಚೇರಮನ್ ಶರಣಪ್ಪ ಕೆ.ರೇವಡಿ, ಅನ್ನದಾನೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಚೇರನ್ನರಾದ ಪ್ರಭು ಎನ್.ಚವಡಿ, ಐಟಿಐ ಪ್ರಾಚಾರ್ಯ ಎ.ಪಿ. ಗಾಣಗೇರ, ಪದವಿ ಪ್ರಾಚಾರ್ಯ ಬಸಯ್ಯ ಎಸ್.ಹಿರೇಮಠ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷ ಮಂಜುನಾಥ ಕಾಡದ ಹಾಗೂ ಸಿಬ್ಬಂದಿಗಳು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶೈಕ್ಷಣಿಕ ಸಲಹೆಗಾರ ಬಿ.ಎಸ್. ಗೌಡರ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುಬಾರದು. ಉತ್ತಮ ಸ್ನೇಹಿತರನ್ನು ಸಂಪಾದಿಸಿ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಪುಸ್ತಕಗಳೇ ನಿಮ್ಮ ಸಹಪಾಠಿಗಳಾಗಿ ಇರಬೇಕು ಎಂದರು.