ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯೆಯ ಜೊತೆಗೆ ಆತ್ಮವಿಶ್ವಾಸ ಮುಖ್ಯವಾಗಿದೆ. ನಮ್ಮ ಅಂತರಾತ್ಮದ ಅರಿವಿನ ಮೂಲಕ ನಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು ಎಂದು ಸರಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಸಿ. ಗುಳಗಣ್ಣವರ ಹೇಳಿದರು.
ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೆಡ್ಕ್ರಾಸ್, ರೋವರ್ಸ್, ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳು ಹೆತ್ತ ತಂದೆ-ತಾಯಿ, ಕಲಿತ ಶಾಲೆ, ಕಲಿಸಿದ ಗುರು ಮತ್ತು ಹೊತ್ತ ಭೂಮಿಯ ಋಣ ತೀರಿಸಬೇಕಾದರೆ ಸಮಾಜ ಮೆಚ್ಚುವ ರೀತಿಯಲ್ಲಿ ಉತ್ತಮ ಪ್ರಜೆಗಳಾಗಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು. ಓದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದನ್ನು ಮರೆಯಬಾರದು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಂ.ಎಸ್. ಧಡೆಸೂರಮಠ, ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ಮಾತನಾಡಿದರು.
ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶರಣಪ್ಪ ಕುರಿ, ದಾವುದ್ ಅಲಿ ಕುದರಿ, ವೀರಪ್ಪ ಜಿರ್ಲ, ಆನಂದ ನಡುವಲಕೇರಿ, ಬಸೀರಾಬಾನು ಅಲ್ಲಾಬಕ್ಷಿ ನದಾಫ್, ರೇಣುಕಾ ಧರ್ಮಾಯತ, ಈ.ಆರ್. ಲಗಳೂರ, ಸಜಿಲಾ, ಸಾಂಸ್ಕೃತಿಕ ಸಂಚಾಲಕ ಎಸ್.ಎಸ್. ಸೂಡಿ, ಐಕ್ಯೂಎಸಿ ಸಂಚಾಲಕಿ ಜಯಶ್ರೀ ಮುತಗಾರ, ಕ್ರೀಡಾ ವಿಭಾಗದ ಸಂಚಾಲಕಿ ಕಾಂಚನಮಾಲಾ ಪಾಟೀಲ, ಎನ್ಎಸ್ಎಸ್ ಸಂಚಾಲಕರಾದ ಎಸ್.ಪಿ. ಕುರೇರ, ಎಸ್.ಎಸ್. ಮುಂಜಿ ಇದ್ದರು.