ಗದಗ:-ಬಸ್ನಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿಗೆ ಪರಿಹಾರ ವಿತರಿಸುವಂತೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಬಸ್ ನಿಲ್ದಾಣದ ಎದುರು ಅರಭಾವಿ-ಚಳ್ಳಕೇರಿ ರಾಜ್ಯ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಟೈರ್ ಗೆ ಬೆಂಕಿ ಹಚ್ಚಿ KSRTC ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಮುಂಡರಗಿ ಪಟ್ಟಣದ ತೋಂಟದಾರ್ಯ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚೈತ್ರಾ ಶಿವಪ್ಪ ಗಡಾದ ಗಾಯಗೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಅ.೧ ರಂದು KSRTC ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಕಾಲೇಜು ಬಳಿ ಬಸ್ ಸ್ಟಾಪ್ ಇಲ್ಲದ ಹಿನ್ನೆಲೆ ಚಾಲಕ ಬಸ್ ನಿಲ್ಲಿಸಿರಲಿಲ್ಲ. ಹೀಗಾಗಿ ಚಲಿಸುವ ಬಸ್ನಿಂದ ವಿದ್ಯಾರ್ಥಿನಿ ಇಳಿಯುವಾಗ ಬಿದ್ದು ಗಂಭೀರ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.
ಹೀಗಾಗಿ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ವಿತರಿಸುವಂತೆ ಹಾಗೂ ಬಸ್ ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.