ಗದಗ: ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂದು ಸರ್ಕಾರ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ವಸತಿ ನಿಲಯ ಇದೀಗ ಅವ್ಯವಸ್ಥೆಯ ಅಡ್ಡೆಯಾಗಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲ ಸೌಲಭ್ಯಗಳೇ ಇಲ್ಲದಂತಾಗಿದ್ದು, ಆಹಾರದಿಂದ ಹಿಡಿದು ಕುಡಿಯುವ ನೀರಿನವರೆಗೆ ಎಲ್ಲ ಕ್ಷೇತ್ರದಲ್ಲೂ ಭಾರೀ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
ಗದಗ ನಗರದ ಗಂಗಿಮಡಿಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಅಕ್ಷರಶಃ ನರಕಯಾತನೆ ಅನುಭವಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸರ್ಕಾರದಿಂದ ಕೋಟಿ ಕೋಟಿ ಅನುದಾನ ಬಂದಿದ್ದರೂ, ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.
ಧಾನ್ಯದಲ್ಲೇ ನುಸಿಗಳ ಸಾಮ್ರಾಜ್ಯ- ಅದೇ ಆಹಾರ ವಿದ್ಯಾರ್ಥಿಗಳ ಹೊಟ್ಟೆಗೆ..!
ವಸತಿ ನಿಲಯದ ಅಡುಗೆಮನೆಗೆ ಸರಬರಾಜಾಗುತ್ತಿರುವ ಗೋಧಿ ಹಾಗೂ ಇತರ ಧಾನ್ಯಗಳಲ್ಲಿ ನುಸಿಗಳು ಬುಸುಗುಟ್ಟುತ್ತಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದೇ ಕಳಪೆ ಧಾನ್ಯ ಮತ್ತು ಹಳೇ ತರಕಾರಿಗಳಿಂದ ಊಟ ತಯಾರಿಸಲಾಗುತ್ತಿದ್ದು, ಅನಾರೋಗ್ಯದ ಭೀತಿ ಎದುರಾಗಿದೆ ಎಂದು ಹೇಳಿದ್ದಾರೆ.
“ಮೇನು ಪ್ರಕಾರ ಊಟ ನೀಡುವುದಿಲ್ಲ. ಮೊಟ್ಟೆ, ಬಾಳೆಹಣ್ಣು ನೀಡದೇ ಹಣ ದುರುಪಯೋಗ ಮಾಡಲಾಗುತ್ತಿದೆ. ಪ್ರಶ್ನೆ ಮಾಡಿದರೆ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಗಲೀಜು ನೀರಿಗೆ ವಿದ್ಯಾರ್ಥಿಗಳ ಅಲರ್ಜಿ- ಕುಡಿಯುವ ನೀರಿಗೂ ಪರದಾಟ
ಬೇಸಿಗೆಯ ಬಿಸಿಯಲ್ಲಿ ಕುಡಿಯುವ ನೀರಿಗಾಗಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಚಿಗಟ್ಟಿದ ನೀರಿನ ಟ್ಯಾಂಕ್ಗಳಲ್ಲಿನ ನೀರನ್ನೇ ಸ್ನಾನ ಮತ್ತು ನಿತ್ಯಕರ್ಮಗಳಿಗೆ ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.
ಗಲೀಜು ನೀರು ಬಳಸುತ್ತಿರುವ ಪರಿಣಾಮ ಅನೇಕ ವಿದ್ಯಾರ್ಥಿಗಳಿಗೆ ಚರ್ಮದ ಅಲರ್ಜಿ, ಮೈತುಂಬಾ ತುರಿಕೆ ಕಾಣಿಸಿಕೊಂಡಿದ್ದು, ಆರೋಗ್ಯ ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಲಾಗಿದೆ. ಅನಾರೋಗ್ಯ ಕಾಣಿಸಿಕೊಂಡರೂ ಚಿಕಿತ್ಸೆ ವ್ಯವಸ್ಥೆ ಮಾಡುವತ್ತ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಧೂಳು ತಿನ್ನುತ್ತಿರುವ ಕಂಪ್ಯೂಟರ್ಗಳು
ವಿದ್ಯಾರ್ಥಿಗಳು ವಾಸಿಸುವ ಕೊಠಡಿಗಳಲ್ಲಿ ಸ್ವಚ್ಛತೆ ಎಂಬುದೇ ಕಾಣಿಸದಂತಾಗಿದೆ. ಕಂಪ್ಯೂಟರ್ಗಳು ಧೂಳು ತಿನ್ನುತ್ತಿದ್ದು, ಹೈಟೆಕ್ ವಸತಿ ನಿಲಯದ ಹೆಸರಿಗೆ ಮಾತ್ರ ಸೌಲಭ್ಯಗಳು ಉಳಿದಿವೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
“ಸರ್ಕಾರ ಅನುದಾನ ಕೊಡುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳ ಬದುಕೇ ದುಸ್ತರವಾಗಿದೆ” ಎಂದು ಅವರು ಆರೋಪಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಕಿಡಿ
ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಗಮನಕ್ಕೆ ಸಮಸ್ಯೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಿಗಳು ಡೋಂಟ್ ಕೇರ್ ಧೋರಣೆ ತಾಳಿದ್ದಾರೆ. ಬಡ ವಿದ್ಯಾರ್ಥಿಗಳ ಗೋಳಾಟ ಕೇಳುವವರೇ ಇಲ್ಲ” ಎಂದು ಆರೋಪಿಸಿದ್ದಾರೆ.
ಇನ್ನಾದರೂ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ವಸತಿ ನಿಲಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.



