ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಈ ಪ್ರಕರಣದ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಅನಾರೋಗ್ಯದ ಹಿನ್ನೆಲೆ ಈಗಾಗಲೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ಮಾದೇಶ ಹಾಗೂ ನಾಲ್ಕನೇ ಆರೋಪಿ ದೊಡ್ಡಯ್ಯ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಮೊದಲ ಆರೋಪಿಗೆ ಜಾಮೀನು ನೀಡಿದ ನಂತರ ಸಂತ್ರಸ್ತ ಕುಟುಂಬಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಗಂಭೀರತೆ, ಸಾರ್ವಜನಿಕ ಭದ್ರತೆ ಹಾಗೂ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ಪರಿಗಣಿಸಿ ನ್ಯಾಯಾಲಯ ಉಳಿದ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ ಎನ್ನಲಾಗಿದೆ.
ಸುಳ್ವಾಡಿ ವಿಷಪ್ರಸಾದ ದುರಂತ ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಕರಣವಾಗಿದ್ದು, ನ್ಯಾಯಾಲಯದ ಈ ಆದೇಶವು ಸಂತ್ರಸ್ತ ಕುಟುಂಬಗಳಿಗೆ ಸ್ವಲ್ಪಮಟ್ಟಿನ ನೆಮ್ಮದಿ ತಂದಿದೆ.



