ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ದತ್ತಾಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ಮೇ 5ರಿಂದ ಪ್ರಾರಂಭಿಸಲಾಗಿದೆ. ಈ ಸಮೀಕ್ಷಾ ಅವಧಿಯನ್ನು ಮೇ 28ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 25ರವರೆಗೆ ಗಣತಿದಾರರಿಂದ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಣೆಯನ್ನು ಮಾಡಲಾಗುತ್ತದೆ. ಮೇ 26ರಿಂದ ಮೇ 28ವರೆಗೆ ಮತಗಟ್ಟೆ ಪ್ರದೇಶದಲ್ಲಿ ಆಯೋಜಿಸಿರುವ ವಿಶೇಷ ಶಿಬಿರಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ತಮ್ಮ ಜಾತಿಯ ಕುರಿತು ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾರೂ ಕೂಡ ಸಮೀಕ್ಷೆಯಿಂದ ದೂರ ಉಳಿಯದಂತೆ, ಅರ್ಹರು ಭಾಗವಹಿಸಿ ಸಮೀಕ್ಷೆ ಉದ್ದೇಶ ಸಫಲಗೊಳ್ಳುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು ಮತ್ತು ದೂರದ ಊರುಗಳಲ್ಲಿ ಇರುವವರು ಮೇ.19ರಿಂದ ಮೇ28ರವರೆಗೆ ಆನ್ಲೈನ್ ಮೂಲಕ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಹಿತಿ ನೀಡಿದರು.