ಹಗರಿಬೊಮ್ಮನಹಳ್ಳಿ: ಪಟ್ಟಣದ ಆಡಳಿತ ವಿಧಾನಸೌಧದ ಸಮೀಪದ ಅಗ್ನಿಶಾಮಕ ಠಾಣೆ ಬಳಿ ಗುರುವಾರ ರಾತ್ರಿ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಆತಂಕ ಹಾಗೂ ಸಂಚಲನಕ್ಕೆ ಕಾರಣವಾಗಿದೆ. ತಲೆಗೆ ಗಂಭೀರ ಗಾಯಗಳಾಗಿರುವ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಪ್ರಕರಣಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಪಟ್ಟಣದ ರಾಮರಹೀಮ್ ನಗರ ನಿವಾಸಿ ಪ್ರಿಯಾಂಕ (27) ಎಂದು ಗುರುತಿಸಲಾಗಿದೆ.
ಅಂಗಡಿಯಿಂದ ಹೊರಟ ಬಳಿಕ ನಡೆದೇನು?
ಪ್ರಿಯಾಂಕ ಕಳೆದ ಕೆಲವು ತಿಂಗಳಿಂದ ಪಟ್ಟಣದ “ಮಿಯಾ ಫ್ಯಾಷನ್” ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಸುಮಾರು 8.30ರವರೆಗೆ ಅಂಗಡಿಯಲ್ಲಿ ಕೆಲಸ ನಿರ್ವಹಿಸಿದ್ದ ಅವರು, ಬಳಿಕ ಇಬ್ಬರು ಯುವಕರೊಂದಿಗೆ ತೆರಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ಇದಾದ ಕೆಲವೇ ಸಮಯದಲ್ಲಿ ಪಟ್ಟಣದ ಹೊರವಲಯದ ಅಗ್ನಿಶಾಮಕ ಠಾಣೆ ಸಮೀಪ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ತಲೆಗೆ ಗಂಭೀರ ಗಾಯ – ಹರಿದ ಬಟ್ಟೆಗಳು
ಘಟನಾ ಸ್ಥಳದಲ್ಲಿ ಯುವತಿಯ ತಲೆಯಿಂದ ಹೆಚ್ಚಿನ ರಕ್ತಸ್ರಾವವಾಗಿರುವುದು ಕಂಡು ಬಂದಿದೆ. ಅಲ್ಲದೇ, ಮೃತೆಯ ಬಟ್ಟೆಗಳು ಹರಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದು ಅಪಘಾತವೋ, ಹಿಟ್ ಅಂಡ್ ರನ್ ಪ್ರಕರಣವೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
ವಿಚ್ಛೇದನದ ಬಳಿಕ ಮಗನೊಂದಿಗೆ ವಾಸ
ಮೂಲಗಳ ಪ್ರಕಾರ, ಪ್ರಿಯಾಂಕ ಸುಮಾರು ಒಂದೂವರೆ ವರ್ಷದ ಹಿಂದೆ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನ ಮುರಿದು ವಿಚ್ಛೇದನವಾಗಿತ್ತು. ಬಳಿಕ ಅವರು ತಮ್ಮ ಮಗನೊಂದಿಗೆ ರಾಮರಹೀಮ್ ನಗರದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಇಬ್ಬರು ಯುವಕರು ವಶಕ್ಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ತನಿಖೆಯ ನಂತರವೇ ಘಟನೆಯ ನಿಜಸ್ವರೂಪ ಬಹಿರಂಗವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಎಸ್ಪಿ ಜಾಹ್ನವಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಹಾಗೂ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೃತೆಯ ಪೋಷಕರು ಠಾಣೆಗೆ ಆಗಮಿಸಿ ದೂರು ಸಲ್ಲಿಸಲು ಮುಂದಾಗಿದ್ದಾರೆ. ಪ್ರಕರಣ ದಾಖಲಾಗಿದ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.



