ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಮುಸ್ಲಿಮರ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು, ವಕ್ಫ್ ಮಂಡಳಿಯನ್ನೇ ರದ್ದುಪಡಿಸಬೇಕು ಎಂದು ಚಂದ್ರಶೇಖರ ಸ್ವಾಮೀಜಿಯವರ ಹೇಳಿಕೆ ಅತ್ಯಂತ ಖಂಡನೀಯ. ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಪ್ರಚೋದಕ ಹೇಳಿಕೆಯಾಗಿದೆ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ವಾಮೀಜಿಗಳ ಈ ಹೇಳಿಕೆ ಮುಸ್ಲಿಮರ ಭಾವನೆಯನ್ನು ಘಾಸಿಗೊಳಿಸಿದೆ. ಇದು ಅವರ ಸ್ಥಾನಮಾನಕ್ಕೆ ವಿರುದ್ಧವಾದ ಮಾತು. ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಅರಳಿಸುವ ಮಾತುಗಳನ್ನಾಡಬೇಕಾದ ಸ್ವಾಮೀಜಿಯವರು ಸಮಾಜವನ್ನು ಕೆರಳಿಸುವ ಪ್ರಯತ್ನ ಮಾಡಿದ್ದಾರೆ. ಧರ್ಮಗುರುಗಳು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವ ಕೆಲಸ ಮಾಡಬೇಕೇ ಹೊರತು ಸಮಾಜದಲ್ಲಿ ಒಡಕು ಮತ್ತು ದ್ವೇಷ ಹರಡಿಸಲು ಕಾರಣರಾಗಬಾರದು. ಸ್ವಾಮೀಜಿಗಳ ಇಂತಹ ಹೇಳಿಕೆಗಳು ಅವರ ಘನತೆಗೆ ಧಕ್ಕೆ ತರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.