ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಬಡ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರದ ಯೋಜನೆಗಳ ಮಾಹಿತಿ ನೀಡುವಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ನೀಡುವುದನ್ನು ಬಿಟ್ಟು ಮಧ್ಯವರ್ತಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಮಂಜೂರು ಮಾಡುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ವ್ಯವಸ್ಥಾಪಕರ ಮೇಲೆ ಕ್ರಮಕೈಗೊಳ್ಳಬೇಕೆಂದು ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದರು.
ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ಜನರು ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಅಲ್ಪಸಂಖ್ಯಾತರ ನಿಗಮದ ವ್ಯವಸ್ಥಾಪಕರು ನಿಜವಾದ ಬಡ ಫಲಾನುಭವಿಗಳನ್ನು ಗುರುತಿಸುವುದನ್ನು ಬಿಟ್ಟು ಮಧ್ಯವರ್ತಿಗಳ ಮೂಲಕ ಲಂಚ ಪಡೆದು ಯೋಜನೆಗಳನ್ನು ಮಂಜೂರು ಮಾಡುತ್ತಿರುವುದರಿಂದ ಸರ್ಕಾರದ ಜನಪರವಾದ ಯೋಜನೆಗಳು ಸಂಪೂರ್ಣ ವಿಫಲವಾಗಿವೆ.
ಇಂತಹ ಭ್ರಷ್ಟ ಅಧಿಕಾರಿಯಿಂದ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತ ಕುಟುಂಬಗಳು ಸರ್ಕಾರದ ಜನಪರವಾದ ಯೋಜನೆಗಳಿಂದ ವಂಚಿತರಾಗಿದ್ದಾರೆ. ಕೂಡಲೇ ಇಂತಹ ಜನವಿರೋಧಿ, ಬಡವರ ವಿರೋಧಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿಯನ್ನು ಗದಗ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿ ಉಪಾಧ್ಯಕ್ಷ ಬಾಬಾಜಾನ ಬಳಗಾನೂರ, ಕಾರ್ಯದರ್ಶಿ ಇಬ್ರಾಹಿಂ ಹಳ್ಳಿಕೇರಿ, ಮುಖಂಡರಾದ ಮೆಹಬೂಬಸಾಬ ಬಳ್ಳಾರಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಖಾಜಾಸಾಬ ಇಸ್ಮಾಯಿಲನವರ, ಸಲೀಂ ಹರಿಹರ, ಅಬ್ದುಲಸಲಾಮ ಮನಿಯಾರ, ಬಾಷಾಸಾಬ ಡಂಬಳ, ಜಂದಿಸಾಬ ಬಳ್ಳಾರಿ, ಮಕ್ತುಮಸಾಬ ಮುಲ್ಲಾನವರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.