ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಬಗೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ವ್ಯವಸ್ಥಿತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಗಮನ ಹರಿಸಬೇಕಾಗಿದೆ. ಗ್ರಾಮಗಳ ಅಭಿವೃದ್ಧಿಯ ಹೊಣೆ ಅಧಿಕಾರಿಗಳ ಮೇಲಿದೆ. ತಹಸೀಲ್ದಾರರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತು ಸಮಿತಿ ರಚಿಸಬೇಕು ಎಂದು ಅವರು ತಿಳಿಸಿದರು.
ಅಣ್ಣಿಗೇರಿ ನಗರವು 24*7 ನಿರಂತರ ಕುಡಿಯುವ ನೀರು ಒದಗಿಸುವಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಒರಿಸ್ಸಾದ ಪುರಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಅದರಂತೆ ನವಲಗುಂದ ನಗರಕ್ಕೆ 24*7 ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರಿನಿಂದ ಜನರಿಗೆ ಕಾಯಿಲೆಗಳು ಬರದಂತೆ ಎಚ್ಚರ ವಹಿಸಬೇಕಾಗಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗಬಾರದು. ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೆರೆಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರು ಒದಗಿಸಲು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಜೆ.ಬಿ. ಮಜ್ಜಗಿ, ನವಲಗುಂದ ತಹಸೀಲ್ದಾರರಾದ ಸುಧೀರ ಸಾಹುಕಾರ, ಅಣ್ಣಿಗೇರಿ ತಹಸೀಲ್ದಾರರಾದ ಎಂ.ಜಿ. ದಾಸಪ್ಪನವರ, ಹುಬ್ಬಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ, ನವಲಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾಗ್ಯಶ್ರೀ ಜಹಗೀರದಾರ್, ಹೆಸ್ಕಾಂ ಇಲಾಖೆಯ ಎಇಇ ಕಿರಣಕುಮಾರ, ಸಿಪಿಐ ಮುರಗೇಶ ಚನ್ನಣ್ಣವರ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯಿತಿಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.
ಕೆರೆಗಳಿಗೆ ಮೀನು ಬಿಟ್ಟು ನೀರನ್ನು ಶುದ್ಧೀಕರಿಸಬೇಕಾಗುತ್ತದೆ. ಜಲ ಜೀವನ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಹೊಂದಿದ್ದಾರೆ. ಹೀಗಾಗಿ ಯಾವುದೇ ರೀತಿಯಲ್ಲಿ ಅಲಕ್ಷ್ಯ ಮಾಡಬಾರದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.