ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ ನಗರದಲ್ಲಿ ಬ್ಯಾನರ್ ತೆರವುಗೊಳಿಸುವ ವಿಚಾರವಾಗಿ ಅಮಾಯಕ ಇಬ್ಬರು ಪೌರಕಾರ್ಮಿಕರ ಮೇಲೆ ಸ್ಥಳೀಯ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯು ಖಂಡಿಸಿ, ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಈ ಘಟನೆಯಿಂದ ನಮ್ಮ ರಾಜ್ಯದಲ್ಲಿ ಶ್ರಮಜೀವಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದೆ. ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ನಮ್ಮ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡಬೇಕು. ಹಾವೇರಿಯ ನಗರಸಭೆ ಎದುರು ಆರೋಪಿಗಳು ಕಾನೂನಿನ ಯಾವುದೇ ಭಯವಿಲ್ಲದೇ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರವ ಪೌರಕಾರ್ಮಿಕರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡು ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಮಲೇಶಪ್ಪ ಕಲಾಲ, ಮಂಜುನಾಥ ಶ್ರೀಗಿರಿ, ಖಾಜಾಸಾಬ ಇಸ್ಮಾಯಿಲನವರ, ಮೌಲಾಸಾಬ ಗಚ್ಚಿ, ರೇಷ್ಮಾ ಢಾಲಾಯತ, ಮಕ್ತುಮಸಾಬ ಮುಲ್ಲಾನವರ, ರವಿ ಗೋಸಾವಿ, ಸಲೀಂ ಹರಿಹರ, ರಿಯಾಜ ಪಾಮಡಿ, ಬಾಷಾಸಾಬ ಡಂಬಳ, ಶಂಕ್ರಪ್ಪ ಶಿವಪೂರ, ರಾಕೇಶ ಗೋಸಾವಿ, ಮಂಜುಳಾ ಮುಂಡರಗಿ, ಚನ್ನಪ್ಪ ಲಕ್ಕುಂಡಿ ಮುಂತಾದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾತಿ-ಧರ್ಮಗಳ ಹೆಸರಲ್ಲಿ ಕೋಮುವಾದಿಗಳು ಅಮಾಯಕರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಕಂಡಿರುವ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಅಶಾಂತಿಯನ್ನು ಹುಟ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಇಂತಹ ಜನವಿರೋಧಿ, ಮಾನವ ವಿರೋಧಿ ಜಾತಿವಾದಿಗಳಿಗೆ ನಮ್ಮ ದೇಶದ ಸಂವಿಧಾನದ ಕಾನೂನು ಪ್ರಕಾರ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.