ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕು ಮಟ್ಟದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಎಪ್ರಿಲ್ 18ರಂದು ಕುರ್ತಕೋಟಿ ಗ್ರಾಮದ ಸಂತೆ ಮಾರುಕಟ್ಟೆ ಪ್ರಾಂಗಣದಲ್ಲಿ ಜರುಗಲಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ ಹೇಳಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವು ಜಿಲ್ಲಾ ಮತ್ತು ರಾಜ್ಯ ಮಟ್ಟದ ಕಾರ್ಯಕ್ರಮವಾಗಿ ಪರಿಣಮಿಸುವಂತೆ ನಮ್ಮ ಪ್ರಯತ್ನ ನಡೆದಿದೆ. ಅಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರಧ್ವಜ ಮತ್ತು ಪರಿಷತ್ತಿನ ಧ್ವಜಾರೋಹಣ ನೆರವೇರಲಿದೆ. 8.30ಕ್ಕೆ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಜೆ.ಕೆ. ಜಮಾದಾರ ಅವರ ಮೆರವಣಿಗೆ, 10 ಗಂಟೆಗೆ ಸಮ್ಮೇಳನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಜ. ಅಭಿನವ ಬೂದೀಶ್ವರ ಸ್ವಾಮೀಜಿ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ, ನಿಕಟಪೂರ್ವ ಅಧ್ಯಕ್ಷೆ ಡಾ. ನೀಲಮ್ಮ ತಾಯಿಯವರು ಅಸುಂಡಿ ಘನ ಉಪಸ್ಥಿತಿ ವಹಿಸುವರು. ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಸಮ್ಮೇಳನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ, ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ, ಸಂಕನೂರ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ಡಿ.ಆರ್. ಪಾಟೀಲ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿವೃತ್ತ ಉಪನ್ಯಾಸಕ ಕೆ.ಎಚ್. ಬೇಲೂರ, ಜಿ.ಎನ್. ಪಾಟೀಲ, ಬಿ.ಸಿ. ಲಕ್ಕುಂಡಿ, ರಾಘವೇಂದ್ರ ಹೊಸಮನಿ, ಕರಿಯಪ್ಪ ಕೊಡವಳ್ಳಿ, ಮಂಜುನಾಥ ಜಕ್ಕಲಿ, ಕಿಶೋರ್ ಬಾಬು ನಾಗರಕಟ್ಟಿ ಇದ್ದರು.
ಇದೇ ಸಂದರ್ಭದಲ್ಲಿ ಹಲವು ಕೃತಿಗಳ ಬಿಡುಗಡೆ ನೆರವೇರಲಿದ್ದು, ವಿದ್ಯಾದಾನ ಸಮಿತಿಯ ಜೆ.ಎನ್. ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹಾಗೂ ಕುರ್ತಕೋಟಿ ಗ್ರಾಮದ ಕಲಾವಿದರಿಂದ, ಚಿಣ್ಣರ ಚಿತ್ರಕಲಾ ಪ್ರದರ್ಶನ ನಡೆಯಲಿದೆ ಎಂದು ಡಾ. ರಶ್ಮಿ ಅಂಗಡಿ ಮಾಹಿತಿ ನೀಡಿದರು.