HomeGadag Newsತೆರಿಗೆ ವಸೂಲಿ ಚುರುಕು; ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ

ತೆರಿಗೆ ವಸೂಲಿ ಚುರುಕು; ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರಗುಂದ: ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಕರವಸೂಲಿಗಾರರು ಹಾಗೂ ವಾಟರ್‌ಮನ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ಬಾಕಿದಾರರ ಪಟ್ಟಿಯನ್ನು ಸಿದ್ಧಪಡಿಸಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಮೂಲಕ ಮುಂಚಿತವಾಗಿ ಮಾಹಿತಿ ನೀಡಿ ವಸೂಲಾತಿ ಕಾರ್ಯ ಚುರುಕುಗೊಳಿಸಬೇಕು. ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳಿಗೆ ತೆರಳುವ ಮುನ್ನವೇ ಮನೆಗಳಿಗೆ ಭೇಟಿ ನೀಡಿ ತೆರಿಗೆ ವಸೂಲಿ ಮಾಡುವಂತೆ ಸೂಚಿಸಿದರು.

ವಸೂಲಾದ ತೆರಿಗೆ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಗ್ರಾಮ ಪಂಚಾಯಿತಿಗಳು ಉತ್ತಮ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸಿದಾಗ ಜನರು ಸ್ವಯಂಪ್ರೇರಿತವಾಗಿ ತೆರಿಗೆ ಪಾವತಿಸುತ್ತಾರೆ. ಆದರೆ ಕಡಿಮೆ ತೆರಿಗೆ ವಸೂಲಾತಿಗೆ ಕರವಸೂಲಿಗಾರರನ್ನೇ ಹೊಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಡಿಮೆ ತೆರಿಗೆ ವಸೂಲಾತಿ ಮಾಡಿರುವ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ಪ್ರಶ್ನಿಸಿದ ಅವರು, ವಸೂಲಾತಿ ಕುಂಠಿತವಾಗಲು ಕಾರಣವೇನು, ಈ ಕುರಿತು ಪಿಡಿಒಗಳ ಗಮನಕ್ಕೆ ತಂದಿದ್ದೀರಾ ಎಂದು ವಿಚಾರಿಸಿದರು. ಮುಂದೆಯೂ ಇದೇ ಪರಿಸ್ಥಿತಿ ಮುಂದುವರಿದರೆ ಶಿಸ್ತುಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

ವಾಟರ್‌ಮನ್‌ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಮೂಲಗಳ ಸಂರಕ್ಷಣೆ ಹಾಗೂ ನೀರಿನ ಮಿತ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಸಂಬಂಧಿತ ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಉತ್ತಮ ಸಾಧಕರಿಗೆ ಗೌರವ

ಸಭೆಯಲ್ಲಿ ಜೂನ್ ತಿಂಗಳಲ್ಲಿ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕೊಣ್ಣೂರು, ಹುಣಶಿಕಟ್ಟಿ, ಶಿರೋಳ ಹಾಗೂ ವಾಸನ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ತಾಲೂಕು ಪಂಚಾಯಿತಿ ವತಿಯಿಂದ ‘ಜನಾಭಿಪ್ರಾಯ ಚಪ್ಪಾಳೆ’ ಕಾರ್ಯಕ್ರಮದಡಿ ಶಾಲು ಹೊದಿಸಿ, ಮಾಲೆ ಹಾಕಿ ಸಭೆಯಲ್ಲಿ ಉಪಸ್ಥಿತರಿದ್ದವರಿಂದ ಚಪ್ಪಾಳೆ ತಟ್ಟಿಸುವ ಮೂಲಕ ಸನ್ಮಾನಿಸಲಾಯಿತು.

ಮುಂದಿನ ತಿಂಗಳುಗಳಲ್ಲಿಯೂ ಉತ್ತಮ ತೆರಿಗೆ ವಸೂಲಾತಿ ಸಾಧಿಸುವ ಕರವಸೂಲಿಗಾರರನ್ನು ಇದೇ ರೀತಿಯಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹಾಂತೇಶ್ ನಿಟ್ಟಾಲಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮ ಹಾದಿಮನಿ ಹಾಗೂ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರು ಮತ್ತು ವಾಟರ್‌ಮನ್‌ಗಳು ಉಪಸ್ಥಿತರಿದ್ದರು.

“ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ನರಗುಂದ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img