ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳಿಸಿ, ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ಕೊಟ್ಟೂರೇಶ್ವರ ಮಠದ ಡಾ. ಕೊಟ್ಟೂರೇಶ್ವರ ಮಹಾಸ್ವಾಮಿಗಳು ಹೇಳಿದರು.
ಲಕ್ಕುಂಡಿ ಸಮೀಪದ ಹರ್ಲಾಪೂರ ಕೊಟ್ಟೂರೇಶ್ವರ ಮಠದಲ್ಲಿ ನಡೆದ ೩೨೦ನೇ ಶಿವಾನುಭವ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾರ್ಥಕತೆ ಕಂಡುಕೊಂಡ ಶಿಕ್ಷಕರನ್ನು ಶಿವಾನುಭವ ಕಾರ್ಯಕ್ರಮದಲ್ಲಿ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ. ಪಾಲಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಸನ್ಮಾನ ಸ್ವೀಕರಿಸಿದ ಕೂಟುಮುಚಗಿ ಗ್ರಾಮದ ನಿವೃತ್ತ ಶಿಕ್ಷಕ ಜೆ.ಎ. ಪಾಟೀಲ ಮಾತನಾಡಿ, ಪವಿತ್ರವಾದ ಶಿಕ್ಷಕ ವೃತ್ತಿಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದ ತೃಪ್ತಿ ಇದೆ. ತಮ್ಮ ಶಿಕ್ಷಣ ಸೇವೆಯನ್ನು ಗುರುತಿಸಿ ಮಠದಿಂದ ಸನ್ಮಾನಿಸಿ ಗೌರವಿಸಿರುವುದು ಸಂತಸ ತಂದಿದೆ. ಪ್ರತಿಯೊಂದು ಶಿವಾನುಭವ ಕಾರ್ಯಕ್ರಮದಲ್ಲೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.
ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಪಿ. ಹೂಗಾರ ಮಾತನಾಡಿ, ಶಿಕ್ಷಕ ವೃತ್ತಿಯ ಸಾರ್ಥಕತೆಗೆ ಮಠದ ಗುರುಗಳ ಆಶೀರ್ವಾದ ಹಾಗೂ ಮಾರ್ಗದರ್ಶನ ಪ್ರಮುಖವಾಗಿದೆ ಎಂದರು. ನಿವೃತ್ತ ಶಿಕ್ಷಕ ಟಿ. ಉದಯಕುಮಾರ ಹಾಗೂ ಜೀವನಸಾಬ ಹಿರೇಹಾಳ ಮಾತನಾಡಿದರು.
ಶಿಕ್ಷಕ ಕೆ.ಆರ್. ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಬಿ. ವೀರಾಪೂರ ಹಾಗೂ ಮಂಜುನಾಥ ಅರ್ಕಸಾಲಿ ಸಂಗೀತ ಸೇವೆ ಸಲ್ಲಿಸಿದರು. ಮಹಾಲಿಂಗಪ್ಪ ಜಮಲಿಂಗಪ್ಪನವರ, ಶರಣಪ್ಪ ದೇಸಾಯಿ, ರಾಮಣ್ಣ ಬೆಳಧಡಿ, ವಿರುಪಾಕ್ಷಪ್ಪ ಹಡಪದ ಹಾಗೂ ದೇವೇಂದ್ರಪ್ಪ ಜಮಲಿಂಗಪ್ಪನವರ ವೇದಿಕೆಯಲ್ಲಿದ್ದರು. ವೆಂಕಟೇಶ ಜುಂಜಣಿ ನಿರೂಪಿಸಿ ವಂದಿಸಿದರು.



